ಕರ್ನಾಟಕ

karnataka

ಫಲಿತಾಂಶದ ನಂತರ ಸರ್ಕಾರ ರಚನೆ ಬಗ್ಗೆ ಚರ್ಚೆ: ದೊಡ್ಡಗೌಡರ ನಿವಾಸದಲ್ಲಿ ಆಂಧ್ರ ಸಿಎಂ

By

Published : May 22, 2019, 4:05 AM IST

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು. ಮಹಾಘಟಬಂಧನ್ ಜೊತೆ ಗುರುತಿಸಿಕೊಂಡಿರುವ ಎಲ್ಲಾ ಪಕ್ಷಗಳು ಒಗ್ಗಟ್ಟಿನಿಂದಿದ್ದು, ಫಲಿತಾಂಶದ ನಂತರ ಹೊಸ ಸರ್ಕಾರ ರಚಿಸುವ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು.

ಚಂದ್ರಬಾಬು ನಾಯ್ಡು

ಬೆಂಗಳೂರು :ಮಹಾಘಟಬಂಧನ್ ಜೊತೆ ಗುರುತಿಸಿಕೊಂಡಿರುವ ಎಲ್ಲಾ ಪಕ್ಷಗಳು ಒಗ್ಗಟ್ಟಿನಿಂದಿದ್ದು, ಫಲಿತಾಂಶದ ನಂತರ ಹೊಸ ಸರ್ಕಾರ ರಚಿಸುವ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದರು.

ಪದ್ಮನಾಭನಗರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ರಾಹುಲ್ ಗಾಂಧಿ ಪ್ರಧಾನಿಯಾಗಲು ಜೆಡಿಎಸ್ ಬೆಂಬಲ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣಾ ಫಲಿತಾಂಶ ಬಂದ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಎಲೆಕ್ಟ್ರಾನಿಕ್ ಮತಯಂತ್ರಗಳ ದುರ್ಬಳಕೆ ಬಗ್ಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಚುನಾವಣಾ ಆಯೋಗದ ಮುಖ್ಯಸ್ಥ ಕುರೇಶಿ ಸೇರಿದಂತೆ ಹಲವರು ಆಕ್ಷೇಪ ಎತ್ತಿದ್ದಾರೆ. ಹೀಗಾಗಿ ವಿವಿ ಪ್ಯಾಟ್ ಎಣಿಕೆ ಮಾಡುವಂತೆ ಆಗ್ರಹ ಪಡಿಸುತ್ತಿದ್ದೇವೆ ಎಂದು ಹೇಳಿದರು.

ಚಂದ್ರಬಾಬು ನಾಯ್ಡು

ಉತ್ತರಪ್ರದೇಶದಲ್ಲಿ ಇವಿಎಂ ಮಷಿನ್​ಗಳನ್ನು ಬದಲಿಸಲಾಗಿದೆ. 2009ರಿಂದ ಇವಿಎಂ ಮಷಿನ್​ಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಾವು ಚುನಾವಣಾ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ನಾಳೆ 23 ಪಕ್ಷಗಳು ಜೊತೆ ಸೇರಿ ಚರ್ಚಿಸುತ್ತೇವೆ. ದೇವೆಗೌಡರ ಬಳಿ ಸಲಹೆ ಪಡೆದುಕೊಂಡಿದ್ದೇನೆ ಎಂದರು.

ದೇವೇಗೌಡರ ಅಸಮಾಧಾನ:

2009ರ ಲೋಕಸಭೆ ಚುನಾವಣೆಯಿಂದ ಇಂದಿನವರೆಗೆ ಇವಿಎಂ ಬಳಕೆಯನ್ನು ನಿಲ್ಲಿಸುವಂತೆ ಪತ್ರ ಬರೆದು ಮನವಿ ಮಾಡುತ್ತಾ ಬಂದಿದ್ದೇವೆ. ಆದರೂ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೇವೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

2004ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆದಾಗ ಮತಗಟ್ಟೆ ಸಮೀಕ್ಷೆಗಳು ಜೆಡಿಎಸ್ ಐದು ಅಥವಾ ಆರು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದವು. ಆದರೆ ಜೆಡಿಎಸ್ 58 ಸ್ಥಾನಗಳನ್ನು ಗೆದ್ದಿತ್ತು ಎಂದು ದೇವೇಗೌಡರು ಮತಗಟ್ಟೆ ಸಮೀಕ್ಷೆ ಟೀಕಿಸಿದರು.

ರಾಹುಲ್ ಗಾಂಧಿ ಪ್ರಧಾನಿ ಮಾಡುವುದಕ್ಕೆ ಜೆಡಿಎಸ್ ಬೆಂಬಲ ಘೋಷಿಸಿದೆ ಎಂಬ ಪ್ರಶ್ನೆಗೆ ಸಿಡಿಮಿಡಿಗೊಂಡ ದೇವೇಗೌಡರು, ಎಷ್ಟು ಬಾರಿ ನಿಮಗೆ ಉತ್ತರ ಹೇಳಬೇಕು ಎಂದು ಹೇಳಿ ಮನೆ ಒಳಗೆ ನಡೆದರು. ಈ ವೇಳೆ ಸಿಎಂ ಕುಮಾರಸ್ವಾಮಿ ಸಹ ಇದ್ದರು.

TAGGED:

ABOUT THE AUTHOR

...view details