ಬೆಂಗಳೂರು: ಆರೋಗ್ಯ ಇಲಾಖೆಯು ಬಡವರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಚಿಕಿತ್ಸೆಯನ್ನು ಒದಗಿಸಿಕೊಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಸಂಜಯಗಾಂಧಿ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡ್ಯುಲರ್ ಶಸ್ತ್ರಚಿಕಿತ್ಸಾ ವಿಭಾಗಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದಲ್ಲೂ 40 ಕೋಟಿ ರೂ. ವೆಚ್ಚದಲ್ಲಿ ಈ ಆಸ್ಪತ್ರೆ ಘಟಕ ನಿರ್ಮಿಸಲಾಗುವುದು. ಉತ್ತಮ ಚಿಕಿತ್ಸೆಗೆ ಬಡವರು ಸಾಲ ಮಾಡಬೇಕಾದ ಪರಿಸ್ಥಿತಿ ರಾಜ್ಯದಲ್ಲಿದೆ. ಇಂತಹ ಪರಿಸ್ಥಿತಿ ಬಡವರಿಗೆ ಬರಬಾರದು ಎಂಬುದು ನಮ್ಮಉದ್ದೇಶವಾಗಿದೆ. ಅಷ್ಟೇ ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತದೆ. ಸರ್ಕಾರಿ ಆಸ್ಪತ್ರೆಗಳ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಬೆಂಗಳೂರಿನ ನಾಲ್ಕು ಮೂಲೆಗಳಲ್ಲೂ 100 ರಿಂದ 150 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಹೈ-ಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮವಾದ ಚಿಕಿತ್ಸೆ ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ: ಸಿಎಂ ಸಂಜಯ್ ಗಾಂಧಿ ಆಸ್ಪತ್ರೆಗೆ ಎಮ್ಆರ್ಐ ಟ್ರಾಮಾ ಹಾಗೂ ಆರ್ಥೋಪೆಡಿಕ್ ಘಟಕಗಳು ಅತ್ಯಗತ್ಯ. ಈ ಮೊದಲು ರೋಗಿಗಳು ಹೊರಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು. ಇದರಿಂದ ಎಲ್ಲ ತಪಾಸಣೆ ಮತ್ತು ಪರೀಕ್ಷೆಗಳನ್ನು ಇಲ್ಲಿಯೇ ನಡೆಸಬಹುದು. ಇದು ಸುಲಭವಾಗಿ ಹಾಗೂ ಶೀಘ್ರವಾಗಿ ಕಾಯಿಲೆ ಬಗ್ಗೆ ನಿರ್ಧರಿಸಲು ಸಹಾಯಕವಾಗಲಿದೆ. ಈ ವ್ಯವಸ್ಥೆಗೆ ಬೇರೆ ಕಡೆಗಳಲ್ಲಿ ಸುಮಾರು 7 ಸಾವಿರ ರೂ. ಖರ್ಚಾಗುತ್ತಿತ್ತು. ಆದರೆ ಇಲ್ಲಿ ಮಾತ್ರ ಎಪಿಎಲ್ ಕಾರ್ಡ್ ಹೊಂದಿದವರಿಗೆ ಕೇವಲ 2,650 ರೂ.ಗೆ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 1,300 ರೂ. ವೆಚ್ಚ ತಗುಲುತ್ತದೆ ಎಂದು ಸಿಎಂ ಸಂತಸ ವ್ಯಕ್ತಪಡಿಸಿದರು.
ನಿರ್ಗತಿಕರಿಗೆ ಉಚಿತ ತಪಾಸಣೆ ನಡೆಸಲಾಗುವುದು. ಅಷ್ಟೇ ಅಲ್ಲದೆ, ದೆಹಲಿಯ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಈ ಮಾದರಿ ವ್ಯವಸ್ಥೆ ಇದೆ. ಮೈತ್ರಿ ಸರ್ಕಾರದ ಅಧಿಕಾರಾವಧಿಯಲ್ಲಿ ಹೆಚ್ಚಿನ ಅಭಿವೃದ್ಧಿಯಾಗಿದೆ. ವೈದ್ಯರಿಗೆ ಪ್ರೋತ್ಸಾಹಧನ ನೀಡಬೇಕೆನ್ನುವ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಇದೇ ವೇಳೆ ಸಿಎಂ ಕುಮಾರಸ್ವಾಮಿ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಎಂಎಲ್ಸಿ ಭೋಜೇಗೌಡ ಉಪಸ್ಥಿತರಿದ್ದರು.