ಚಾಮರಾಜನಗರ: ಜಿಲ್ಲಾಡಳಿತ ಭವನದಲ್ಲಿ ಬುಧವಾರ ಸರ್ಕಾರಿ ನೌಕರರೊಬ್ಬರ ಹುಟ್ಟುಹಬ್ಬದ ಆಚರಣೆ ಮಾಡಲಾಗಿದ್ದು, ಸಾಮಾಜಿಕ ಅಂತರ ಮರೆತು ಜನ್ಮದಿನ ಆಚರಿಸಿರುವುದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಸಾಮಾಜಿಕ ಅಂತರ ಗಾಳಿಗೆ ತೂರಿ ಹುಟ್ಟುಹಬ್ಬ ಆಚರಣೆ
ಚಾಮರಾಜನಗರದ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸರ್ಕಾರಿ ನೌಕರರೊಬ್ಬರ ಹುಟ್ಟುಹಬ್ಬವನ್ನು ಸಾಮಾಜಿಕ ಅಂತರ ಮರೆತು ಆಚರಣೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಸಂಭ್ರಮ ನಡೆದಿದೆ ಎನ್ನಲಾಗಿದೆ. ಅಲ್ಲಿನ ನೌಕರನಾದ ಪಿ.ನಂಜುಂಡಸ್ವಾಮಿ ಎಂಬುವವರ ಜನ್ಮದಿನವನ್ನು ಕಚೇರಿಯಲ್ಲೇ ಆಚರಿಸಲಾಗಿದೆ ಎನ್ನಲಾಗಿದೆ. ಆದರೆ, ಈ ವೇಳೆ ಸರ್ಕಾರಿ ನೌಕರರು ಮಾಸ್ಕ್ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಇಲ್ಲದೇ ಆಚರಣೆ ಮಾಡಿರುವುದು ಸರಿಯೇ ಎಂದು ನೆಟ್ಟಿಗರು ಟೀಕಿಸಿದ್ದಾರೆ.
ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲಾಡಳಿತ ಭವನದಲ್ಲಿ ಸಾಲು ಸಾಲು ಸಭೆಗಳನ್ನು ನಡೆಸಿದ್ದರು. ಅವರ ಭೇಟಿ ದಿನವೇ ಈ ಆಚರಣೆ ನಡೆದಿರುವುದು ಮತ್ತೊಂದು ವಿಪರ್ಯಾಸ. ಕೊರೊನಾ ಸಂದರ್ಭದಲ್ಲಿ ಈ ರೀತಿ ಸಂಭ್ರಮಾಚರಣೆ ಮಾಡಿರುವವರ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.