ಚಾಮರಾಜನಗರ:ಯುಗಾದಿ ಬಂತೆಂದರೆ ಪ್ರಕೃತಿಯಲ್ಲಿ ನವೋಲ್ಲಾಸದ ಸಡಗರ. ಅದೇ ರೀತಿ, ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆಯೂ ಇದಾಗಿದ್ದು, ಚಾಮರಾಜನಗರ ಜಿಲ್ಲೆಯ ಹಲವೆಡೆ ಸಂಭ್ರಮದಿಂದ ಹೊನ್ನೇರನ್ನು ಕಟ್ಟಿ ಭೂಮಿ ತಾಯಿಯನ್ನು ಪ್ರಾರ್ಥಿಸುವುದು ವಾಡಿಕೆ. ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಸಿಂಪಡಿಸುವ ಮೂಲಕ ಹೊಸ ವರ್ಷದ ಮೊದಲ ದಿನ ಕೃಷಿ ಚಟುವಟಿಕೆ ಆರಂಭಿಸಿ ಬೆಳೆ-ಬೆಲೆ ಚೆನ್ನಾಗಿ ಬಂದು ರೋಗ-ರುಜಿನ ಮಾಯವಾಗಿ ನೆಮ್ಮದಿಯ ಜೀವನ ಸಿಗಲೆಂದು ಬೇಡುವುದು ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ.
ಯುಗಾದಿ ಆರಂಭವಾಗುತ್ತಿದ್ದಂತೆ ಮಳೆ ಬರಲಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗುತ್ತದೆ. ಎತ್ತುಗಳು ಮತ್ತು ಗಾಡಿಗೆ ಹೊಂಬಾಳೆ ಕಟ್ಟಿ ಪೂಜೆ ಸಲ್ಲಿಸಿ ಗೊಬ್ಬರವನ್ನು ಜಮೀನುಗಳಿಗೆ ಸಿಂಪಡಿಸುವ ಸಂಪ್ರದಾಯಕ್ಕೆ ಹೊನ್ನೇರು ಎಂದು ಕರೆಯಲಾಗುತ್ತದೆ. ಚಾಮರಾಜನಗರ ಜಿಲ್ಲೆಯ ಬಹುತೇಕ ಗ್ರಾಮದಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಬ್ರಾಹ್ಮಿ ಮುಹೂರ್ತದಲ್ಲಿ ಎತ್ತುಗಳನ್ನು ತೊಳೆದು ಕೊಂಬುಗಳಿಗೆ ಹೊಂಬಾಳೆ, ಕೊರಳಿಗೆ ಬಿಳಿಕಣಗಿಲೆ ಹೂವು, ಮಂಡೆ ಹುರಿ ಕಟ್ಟುತ್ತಾರೆ. ಜೊತೆಗೆ ಎತ್ತಿನಗಾಡಿಯನ್ನು ಬಾಳೆಕಂದು, ಮಾವಿನ ಸೊಪ್ಪಿನಿಂದ ಅಲಂಕರಿಸುತ್ತಾರೆ. ಕೊಟ್ಟಿಗೆ ಗೊಬ್ಬರಕ್ಕೆ ಪೂಜೆ ಸಲ್ಲಿಸಿ ಬಳಿಕ ಆಯಾ ಗ್ರಾಮಗಳ ಗ್ರಾಮದೇವತೆಗೆ ನಮಸ್ಕರಿಸಿ ತಮ್ಮ ತಮ್ಮ ಜಮೀನುಗಳಿಗೆ ಗೊಬ್ಬರವನ್ನು ಸಿಂಪಡಿಸಿ ಬರುತ್ತಾರೆ. ನೂತನ ವರ್ಷದ ಮೊದಲ ದಿನ ರೈತರು ಆ ವರ್ಷದ ಕೃಷಿ ಚಟುವಟಿಕೆ ವಿಧಿವತ್ತಾಗಿ ಅಡಿಯಿಡುವ ಸಂಪ್ರದಾಯ ತಲೆತಲಾಂತರದಿಂದ ನಡೆದುಕೊಂಡು ಬಂದಿದ್ದು ಇಂದಿಗೂ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಈ ವಿಶೇಷ ಆಚರಣೆ ಜೀವಂತವಾಗಿದೆ.