ಚಾಮರಾಜನಗರ: ಬಿಜೆಪಿಯ ಪ್ರಭಾವಿ ಮುಖಂಡ, ಲಿಂಗಾಯತ ಸಮುದಾಯದ ನಾಯಕ ವಿ.ಸೋಮಣ್ಣ ಅವರನ್ನು ಸೋಲಿಸಿ ಚಾಮರಾಜನಗರದಲ್ಲಿ ಸತತ 4ನೇ ಬಾರಿ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಪಟ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು, ಮೂರರಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಚಾಮರಾಜನಗರದ ಮೂವರು ಕಾಂಗ್ರೆಸ್ ಶಾಸಕರಲ್ಲಿ 68 ರ ಹರೆಯದ ಪುಟ್ಟರಂಗಶೆಟ್ಟಿ ಹಿರಿಯರು. ಹಾಗೆಯೇ, ಉಪ್ಪಾರ ಜಾತಿಯ ರಾಜ್ಯದ ಏಕೈಕ ಶಾಸಕ ಎಂಬ ಹೆಗ್ಗಳಿಕೆಯೂ ಇವರದ್ದಾಗಿದ್ದು, ಸಿದ್ದು ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಸಿದ್ದು ಕಟ್ಟಾ ಬೆಂಬಲಿಗ - 4 ಬಾರಿ ಶಾಸಕ:ಸಿ.ಪುಟ್ಟರಂಗಶೆಟ್ಟಿಯವರು ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗರಾಗಿದ್ದು, ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ "ಈಗಲೂ ನನಗೆ ಸಿದ್ದರಾಮಯ್ಯನೇ ಸಿಎಂ" ಎಂದು ಹೇಳಿಕೆ ನೀಡುವ ಮೂಲಕ ಗಮನ ಸೆಳೆದಿದ್ದರು. ಹಾಗೆಯೇ, ಕ್ಷೇತ್ರ ಹುಡುಕಾಟದ ವೇಳೆ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ ಎಂದು ಆಹ್ವಾನ ಕೊಟ್ಟಿದ್ದರು.
ಇದನ್ನೂ ಓದಿ :ಡಿಸಿಎಂ ಹುದ್ದೆ ಮೇಲೆ ಕಣ್ಣು : ಕಾಂಗ್ರೆಸ್ ನಾಯಕರು ಹೇಳಿದ್ದೇನು?
ಸಿದ್ದು ಆಪ್ತ ಬಳಗದ ಶಾಸಕರಲ್ಲಿ ಗುರುತಿಸಿಕೊಂಡಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮಣೆ ಹಾಕುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಚಾಮರಾಜನಗರಕ್ಕೆ ಪ್ರಾತಿನಿಧ್ಯ ಕೊಡಬೇಕಾಗಿರುವ ಜೊತೆಗೆ ಹಿಂದುಳಿದ ವರ್ಗ ಉಪ್ಪಾರ ಸಮುದಾಯಕ್ಕೂ ಆದ್ಯತೆ ನೀಡಬೇಕಿರುವುದರಿಂದ ಪುಟ್ಟರಂಗಶೆಟ್ಟಿಗೆ ಮಂತ್ರಿ ಭಾಗ್ಯ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಗಬಹುದು ಎನ್ನಲಾಗಿದೆ.