ಚಾಮರಾಜನಗರ: ವೃದ್ಧರು , ವಿಧವೆಯರು ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡಲೆಂದು ರೂಪಿಸಿರುವ ಸಾಮಾಜಿಕ ಭದ್ರತಾ ಯೋಜನೆ ಆರ್ಹರಿಗೆ ತಲುಪಿಸುವಲ್ಲಿ ವಿಳಂಬ ಮಾಡಕೂಡದು ಎಂದು ಸಚಿವ ಆರ್.ವಿ.ದೇಶಪಾಂಡೆ ಖಡಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಚಾಮರಾಜನಗರ ಜಿಲ್ಲೆಯಷ್ಟು ಯಾವ ಜಿಲ್ಲೆಗಳಲ್ಲೂ ಈ ಪರಿ ಫಲಾನುಭವಿಗಳ ಅರ್ಜಿಗಳು ಬಾಕಿ ಉಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 665 ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ 69 ಮತ್ತು ವಿಧವಾ ವೇತನ 100 ಪ್ರಕರಣಗಳ ಬಾಕಿ ಉಳಿದಿವೆ. ಆದ್ಯತೆ ಮೇಲೆ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವಂತೆ ಅವರು ಸೂಚಿಸಿದರು.
14 ವರ್ಷ ಬರ:
ಕಳೆದ 18 ವರ್ಷಗಳಲ್ಲಿ 4 ವರ್ಷ ಮಾತ್ರ ಮಳೆಯಾಗಿದ್ದು 14 ವರ್ಷ ಮಳೆಯಿಲ್ಲದೇ ರಾಜ್ಯ ತತ್ತರಿಸಿದೆ. ಬರ ಎದುರಿಸುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಕುಡಿಯುವ ನೀರು ಪೂರೈಸಲು ಕೊಳವೆ ಬಾವಿಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಈಗಾಗಲೇ ಕೊರೆಯಲಾಗಿರುವ ಕೊಳವೆ ಬಾವಿಗಳ ಪೈಕಿ ನೀರಿನ ಲಭ್ಯತೆ ಕಡಿಮೆಯಾಗಿರುವ ಕೊಳವೆ ಬಾವಿಗಳನ್ನು ಮರುಪೂರಣ ಮಾಡುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಅದಕ್ಕಾಗಿ ಸರ್ಕಾರ ಎಷ್ಟು ಹಣ ಬೇಕಾದರೂ ನೀಡುತ್ತದೆ ಎಂದು ತಿಳಿಸಿದರು.
ಪ್ರಕೃತಿ ವೈಪರೀತ್ಯದಿಂದ ಜಿಲ್ಲೆಯಲ್ಲಿ ಹಾನಿಗೆ ಒಳಗಾಗಿರುವ ಬಾಳೆ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆದ ರೈತರಿಗೆ ನಿಯಮಾನುಸಾರ ಬೆಳೆ ಪರಿಹಾರವನ್ನು ವಿಳಂಬ ಮಾಡದೇ ವಿತರಿಸಬೇಕು. ಇನ್ನು 7 ದಿನಗಳ ಒಳಗೆ ಸಂಬಂಧಪಟ್ಟ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದರು. ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಅಗತ್ಯರುವ ಬಿತ್ತನೆ, ರಸಗೊಬ್ಬರ ಇನ್ನಿತರ ಪೂರಕ ವ್ಯವಸ್ಥೆಗಳನ್ನು ಸಹ ಸಮರ್ಪಕವಾಗಿ ಕೈಗೊಳ್ಳಬೇಕು, ರೇಷ್ಮೆ ಕೃಷಿಗೂ ಸಹ ಯಾವುದೇ ಕೊರತೆ ಬಾರದಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿ ಪ್ರಗತಿ ಪರಿಶೀಲಿಸಿದ ಸಚಿವರು ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಗ್ರಾಮೀಣ ಜನರ ಉದ್ಯೋಗಕ್ಕೆ ಯಾವುದೇ ತೊಂದರೆ ಬಾರದಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಬೇಕು, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಅವಕಾಶ ಕಲ್ಪಿಸಬೇಕು, ಯಾರು ಸಹ ಗುಳೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಕಪ್ಪು ಬಾವುಟ ಪ್ರದರ್ಶಿಸಲು ಯತ್ನ:
ಕೆರೆಗಳಿಗೆ ನೀರು ತುಂಬಿಸುವಲ್ಲಿ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಸಲುವಾಗಿ, ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಿಲು ಮುಂದಾಗಿದ್ದ ರೈತಸಂಘದ ಕಾರ್ಯಕರ್ತರನ್ನು ಬಂಧಿಸಿ, ಬಿಡುಗಡೆಗೊಳಿಸಲಾಯಿತು.
ಬರವೀಕ್ಷಣೆಗೆ ಆಗಮಿಸಿದ್ದ ಕಂದಾಯ ಸಚಿವರಿಗೆ ಪಣ್ಯದ ಹುಂಡಿ ಬಳಿ ಕಪ್ಪು ಭಾವುಟ ಪ್ರದರ್ಶನ ಮಾಡಲು ಮಂದಾಗಿದ್ದ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಗುರುಪ್ರಸಾದ್, ಉಪಾಧ್ಯಕ್ಷ ಎಚ್. ಮೂಕಳ್ಳಿ ಪೃಥ್ವಿ, ಮೇಲಾಜಿಪುರ ಶಿವು, ಕುಮಾರ್, ಶಿವರುದ್ರಪ್ಪ, ಮಹೇಶ್, ವಿಜಯಕುಮಾರ್, ಮಹೇಶ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಬಳಿಕ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ರೈತ ಸಂಘದ ಕಾರ್ಯಕರ್ತರನ್ನು ಬಂಧಿಸಿದ ವಿಚಾರ ತಿಳಿದು ಗುಂಡ್ಲುಪೇಟೆ ಮತ್ತು ಸಂತೇಮರಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಬಂಧನಕ್ಕೆ ಒಳಗಾಗಿದ್ದ ರೈತ ಸಂಘದ ಕಾರ್ಯಕರ್ತರು ಸಚಿವರು ಸಭೆ ಮುಗಿಸಿ ತೆರಳುವ ಸಂದರ್ಭದಲ್ಲಿ ಭೇಟಿ ಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಕೆರೆಗಳಿಗೆ ನೀರು ತುಂಬಿಸುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಮತ್ತು ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರು ರೈತರು ಕಂದಾಯ ಕಟ್ಟುವುದಿಲ್ಲ ಎಂದು ಹಗುರವಾಗಿ ಮಾತನಾಡಿದ್ದಾರೆ . ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೆರೆಗಳಿಗೆ ನೀರು ತುಂಬಿಸುವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ. ಮುಖ್ಯಮಂತ್ರಿಗಳು ಸೂಕ್ತ ಭರವಸೆ ನೀಡುವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ತಿಳಿಸಿದರು.