ಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ವಿವಿಧ ದೇವಾಲಯಗಳಿಗೆ ಭಕ್ತರ ದಂಡು ಹರಿದು ಬರುತ್ತಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಂತೂ ಭಕ್ತಸಾಗರವೇ ಜಮಾಯಿಸಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿನ ಮಹಾಶಿವರಾತ್ರಿ ಜಾತ್ರೆ ನಿನ್ನೆ ಆರಂಭವಾಗಿದ್ದು, ನಾಳೆಗೆ ಮುಕ್ತಾಯವಾಗಲಿದೆ. ಜಾತ್ರೆಗೆ ವಿಧಿಸಲಾಗಿದ್ದ ಎಲ್ಲ ನಿರ್ಬಂಧಗಳನ್ನು ನಿನ್ನೆ ನಡೆದ ಸಭೆಯಲ್ಲಿ ಹಿಂತೆಗೆದುಕೊಳ್ಳಲಾಗಿದೆ. ಕ್ಷೇತ್ರದಲ್ಲಿ ಭಕ್ತರಿಗೆ ವಾಸ್ತವ್ಯಕ್ಕೆ, ರಥೋತ್ಸವ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮಂಗಳವಾರದಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಉಸ್ತುವಾರಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ನಿರ್ಣಯ ಕೈಗೊಳ್ಳಲಾಗಿದೆ.
ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಸಭೆ ಮಲೆಮಹದೇಶ್ವರ ಬೆಟ್ಟದ ಜಾತ್ರೆಯ ಸಂಬಂಧ ಸಿಎಂ ಬೊಮ್ಮಾಯಿ ಅವರೊಂದಿಗೆ ತಾವು ಮಾತನಾಡಿದ್ದು, ಸ್ಥಳೀಯವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ತಿಳಿಸಿದ್ದರು. ಅದರಂತೆ ಜಿಲ್ಲೆಯ ಶಾಸಕರೊಂದಿಗೆ ಸಮಾಲೋಚಿಸಿ ಕೋವಿಡ್ ತಗ್ಗಿರುವ ಕಾರಣ ಭಕ್ತಾದಿಗಳಿಗೆ ಯಾವುದೇ ನಿರ್ಬಂಧ ವಿಧಿಸದೇ ಇರಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸೋಮಣ್ಣ ತಿಳಿಸಿದರು.
ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಸಂದರ್ಭಕ್ಕಾಗಿ ವಿಧಿಸಲಾಗಿದ್ದ ನಿರ್ಬಂಧ ಹಿಂಪಡೆದಿರುವ ಕಾರಣ ಭಕ್ತರಿಗೆ ಯಾವುದೇ ತೊಂದರೆ ಇಲ್ಲ. ಭಕ್ತರು ಕ್ಷೇತ್ರಕ್ಕೆ ಆಗಮಿಸಬಹುದು. ವಾಸ್ತವ್ಯ ಹೂಡಬಹುದು. ಶಿವರಾತ್ರಿ ರಥೋತ್ಸವದಲ್ಲೂ ಪಾಲ್ಗೊಳ್ಳಬಹುದು. ಆದರೆ, ಕೋವಿಡ್ ನಿಯಮ ಪಾಲನೆ ಮಾಡಬೇಕು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಶಿವಗಿರಿಯಲ್ಲಿ ಮಹಾ ಶಿವರಾತ್ರಿ ಸಂಭ್ರಮ:ಶಿವರಾತ್ರಿ ಮಹೋತ್ಸವಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾಧಿಗಳಿಗೆ ವಾಸ್ತವ್ಯ, ಪ್ರಸಾದ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ ಎಂದರು. ನಾಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವ ನಡೆಯಲಿದೆ...