ಚಿಕ್ಕಬಳ್ಳಾಪುರ: ರಸ್ತೆ ಅಗಲೀಕರಣದ ನೆಪವೊಡ್ಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ರಾತ್ರೋರಾತ್ರಿ ನೂರಾರು ಮರಗಳನ್ನು ಕಡಿದು ಹಾಕಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಬೊಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಬೃಹದಾಕಾರದ ಮರಗಳ ಮಾರಣಹೋಮ.. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡಬೊಮ್ಮನಹಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ನೂರಾರು ಮರಗಳನ್ನ ಕತ್ತರಿಸಿದ್ದಾರೆ.
ರಸ್ತೆ ನಿರ್ಮಾಣಕ್ಕೆ ಬೇಕಾಗುವಷ್ಟು ಜಾಗ ಇದ್ದರೂ ಸಹ ಅರಣ್ಯ ಇಲಾಖೆಯ ಗಮನಕ್ಕೆ ತಾರದೆ ರಾತ್ರೋರಾತ್ರಿ ಹಾಲಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬೆಂಬಲಿಗರು ಹಾಗೂ ದೊಡ್ಡಬೊಮ್ಮನಹಳ್ಳಿ ಗ್ರಾಮದ ವೆಂಕಟರೆಡ್ಡಿ ಎಂಬುವರು ಮರಗಳನ್ನು ತೆರುವುಗೊಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇನ್ನು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಜೆಸಿಬಿ ಹಾಗೂ ಒಂದು ಲಾರಿ ವಶಕ್ಕೆ ಪಡೆದುಕೊಂಡಿದ್ದು, ವಾಹನ ಚಾಲಕರ ವಿರುದ್ಧ ದೂರು ದಾಖಲಿಸಿ ದಂಡ ವಸೂಲಿಗೆ ಮುಂದಾಗಿದ್ದಾರೆ.