ಗುಡಿಬಂಡೆ: ಪಟ್ಟಣದ ತಾಲೂಕು ಕಚೇರಿ ಮುಂಭಾಗ ನ್ಯಾ.ಸದಾಶಿವ ಆಯೋಗದ ವರದಿಯನ್ವಯ ಒಳ ಮೀಸಲಾತಿ ಕಾಯ್ದೆ ಜಾರಿಗಾಗಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದವು.
ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹ, ದಲಿತಪರ ಸಂಘಟನೆಯಿಂದ ಮನವಿ ಈ ವೇಳೆ ಮಾತನಾಡಿದ ಜೀವಿಕ ಸಂಘಟನೆಯ ಚೆನ್ನರಾಯಪ್ಪ, ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದಿಂದ ಯಾವುದೇ ಕೆಳವರ್ಗದ ಸಮುದಾಯಗಳಿಗೆ ಧಕ್ಕೆಯಾಗುವುದಿಲ್ಲ. ಇದನ್ನು ಎಲ್ಲ ಸಮುದಾಯಗಳು ಅರ್ಥೈಸಿಕೊಳ್ಳುವುದು ಅಗತ್ಯವಾಗಿದ್ದು, ಒಳಮೀಸಲಾತಿ ಜಾರಿಯಿಂದ 101 ಕೆಳವರ್ಗದ ಜಾತಿಗಳಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ.
ಈ ಬಗ್ಗೆ ಕೇವಲ ಒಂದೆರಡು ಜಾತಿಗಳ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಸದಾಶಿವ ಆಯೋಗದ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಒಳ ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ನಂತರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕದಿರಪ್ಪ ಮಾತನಾಡಿ, ಪರಿಶಿಷ್ಟ ಜಾತಿಯ ಒಳ ಪಂಗಡಗಳಿಗೆ ಆಶಾಕಿರಣವಾಗಿರುವ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗಾಗಿ ಹಲವು ವರ್ಷಗಳಿಂದ ಗಾಂಧಿ ಮಾರ್ಗದಲ್ಲಿಯೇ ಹೋರಾಟ ನಡೆಸಲಾಗುತ್ತಿದೆ. ಆದರೆ, ಸರ್ಕಾರಗಳು ಮಾತ್ರ ಈ ಕುರಿತು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾ.ಎ.ಜೆ.ಸದಾಶಿವ ಆಯೋಗವು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ತೆರಳಿ ಮಾದಿಗರ ಸಮಾಜದ ಒಳಪಂಗಡಗಳ ಸ್ಥಿತಿ ಗತಿ ಅಧ್ಯಯನ ಮಾಡಿ ವರದಿ ಸಿದ್ಧಪಡಿಸಿದೆ. ದೊರೆಯಬೇಕಾದ ಮೀಸಲಾತಿ ಸರಿಯಾಗಿ ದೊರಕಿಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಆದ್ದರಿಂದ ಸರ್ಕಾರ ಈ ಕುರಿತು ಶೀಘ್ರ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.