ಚಿಕ್ಕಬಳ್ಳಾಪುರ: ಪೊಲೀಸ್ ಇಲಾಖೆಗೆ ಶಾಸಕರ ಅನುದಾನದಲ್ಲಿ 16 ಲಕ್ಷ ರೂ. ಮೌಲ್ಯದ ವಾಹನಗಳನ್ನು ಜಿಲ್ಲಾ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಾರೆಡ್ಡಿ ಹಸ್ತಾಂತರಿಸಿದರು.
2 ಬೊಲೆರೋ ವಾಹನಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ ಶಾಸಕ ಎಂ.ಕೃಷ್ಣಾರೆಡ್ಡಿ ನಗರದ ಪೊಲೀಸ್ ಠಾಣೆ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 16 ಲಕ್ಷ ರೂ. ಮೌಲ್ಯದ 2 ಬೊಲೆರೋ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಅಧಿಕಾರಿಗಳು ಜನರು ನೆನಪಿನಲ್ಲಿಟ್ಟುಕೊಳ್ಳುವಂತಹ ಕೆಲಸಗಳನ್ನು ಮಾಡಬೇಕು. ವೈಯುಕ್ತಿಕ ಆಸಕ್ತಿ ವಹಿಸಿ ಸಮಸ್ಯೆಗಳನ್ನು ಬಗೆಹರಿಸಲು ಶ್ರಮವಹಿಸಬೇಕು. ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಸರ್ಕಾರಿ ಇಲಾಖೆಯಲ್ಲಿ ವಾಹನಗಳ ಕೊರತೆ ಇರುತ್ತದೆ. ಇದು ಸಾರ್ವಜನಿಕರಿಗೆ ಗೊತ್ತಾಗುವುದಿಲ್ಲ. ಅಧಿಕಾರಿಗಳು ಮನಸ್ಸು ಮಾಡಿದರೆ ಇಂತಹ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಿಕೊಳ್ಳಬಹುದು ಎಂದರು.
ಎಸ್ಪಿ ಮಿಥುನ್ ಕುಮಾರ್ ಮಾತನಾಡಿ, ಪೊಲೀಸ್ ಇಲಾಖೆಗೆ ವಾಹನಗಳ ಅಗತ್ಯ ಹೆಚ್ಚಾಗಿರುತ್ತದೆ. ತುರ್ತು ಕಾರ್ಯಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ತೊಡಗಿರುತ್ತಾರೆ. ಸುಸಜ್ಜಿತವಾದ ವಾಹನಗಳು ಅಗತ್ಯ. ಕೊರೊನಾ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ ತುಂಬಾ ತೊಂದರೆಯಾಗಿದೆ. ಹೀಗಾಗಿ 50 ಚಾಲಕರಿಗೆ ಉಚಿತ ಸಮವಸ್ತ್ರ ನೀಡಲಾಗಿದೆ. ನಗರದ ಗ್ರಾಮಾಂತರ ಪೊಲೀಸ್ ಠಾಣೆಗೆ ನೂತನ ಕಟ್ಟಡವನ್ನು ನಿರ್ಮಿಸಿ ಕೊಡಬೇಕಾಗಿ ಕೋರಿದರು.
ಇದೇ ವೇಳೆ, ಸಾರಿಗೆ ಇಲಾಖೆ ಅಧಿಕಾರಿ ನಾಗರಾಜ್ ಮಾತನಾಡಿ, ಚಾಲಕರು ವಾಹನದ ದಾಖಲೆಗಳನ್ನು ಹೊಂದಿರಬೇಕು. ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ನಡೆದರೆ ಎಲ್ಲರಿಗೂ ಒಳ್ಳೆಯದಾಗುತ್ತದೆ. ನಗರದಲ್ಲಿ ಸಹಾಯಕ ಪ್ರದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಒಂದು ಕಟ್ಟಡವನ್ನು ನಿರ್ಮಿಸಿಕೊಡಬೇಕಾಗಿ ಶಾಸಕರಲ್ಲಿ ಮನವಿ ಮಾಡಿದರು.
ಈ ವೇಳೆ, ಡಿವೈಎಸ್ಪಿ ವಿ.ಲಕ್ಷ್ಮಯ್ಯ, ನಗರಠಾಣೆ ಇನ್ಸ್ಪೆಕ್ಟರ್ ಆನಂದಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸಪ್ಪ, ಪೌರಾಯುಕ್ತ ಉಮಾಶಂಕರ್, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ಜನಿಕರು ಉಪಸಿತರಿದ್ದರು.