ಬಾಗೇಪಲ್ಲಿ(ಚಿಕ್ಕಬಳ್ಳಾಪುರ): ಮಳೆಗಾಲ ಶುರುವಾಗಿದ್ದರೂ ತಾಲೂಕಿನ ಬಹಳಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗುತ್ತಲೇ ಇದೆ. ಹೀಗಿರುವಾಗ ಹಲವೆಡೆ ರಾಜಕಾರಣಿಗಳು, ಅಧಿಕಾರಿಗಳು ಜಲ ಸಂರಕ್ಷಣೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ, ಪ್ರಾಮಾಣಿಕವಾಗಿ ಜಾರಿ ಮಾಡುವಲ್ಲಿ ವಿಫಲವಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಊರಿಗೆ ನೀರನ್ನು ಸರಬರಾಜು ಮಾಡುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋಗುತ್ತಿವೆ. ನೀರಿಗಾಗಿ ಪ್ರತಿ ಮನೆಗೊಬ್ಬರು ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಎದುರಿಸಬೇಕಿದೆ. ಸರ್ಕಾರದಿಂದ ಕೆಲ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ. ಸಾವಿರ ಅಡಿಗಳವರೆಗೂ ಕೊರೆಸಿದರು ನೀರು ಸಿಗುತ್ತಿಲ್ಲ.
ಬಹಳಷ್ಟು ಭಾಗಗಳಲ್ಲಿ ಸ್ಥಳೀಯ ಮುಖಂಡರೊಂದಿಗೆ ಗುತ್ತಿಗೆದಾರರು ಸೇರಿಕೊಂಡು ಅಂತರ್ಜಲ ವೃದ್ಧಿಸುವ ಬದು ನಿರ್ಮಾಣ, ಚೆಕ್ ಡ್ಯಾಂ ನಿರ್ಮಾಣ, ಗಿಡ ಬೆಳೆಸುವುದು ಸೇರಿದಂತೆ ಹಲವಾರು ಕಾಮಗಾರಿಗಳು ಅವೈಜ್ಞಾನಿಕವಾಗಿ ಕೈಗೊಳ್ಳುತ್ತಿರುವ ನಿದರ್ಶನಗಳಿವೆ.