ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೃಷಿ ಯೋಗ್ಯ ಭೂಮಿಯನ್ನು ಸರ್ಕಾರ ಅರಣ್ಯ ಇಲಾಖೆಗೆ ವರ್ಗಾವಣೆ ಮಾಡುತ್ತಿರುವುದನ್ನು ಕೂಡಲೇ ತಡೆಯಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಕಂದಾಯ ಹಾಗೂ ಕೃಷಿ ಯೋಗ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಹಿಸುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಚಿಕ್ಕಮಗಳೂರು ತಾಲೂಕಿನ ಗಿರಿ ಸಂರಕ್ಷಣಾ ಯೋಜನೆಯಡಿ ಸುಮಾರು 20 ಸಾವಿರ ಎಕರೆ ಕೃಷಿ ಭೂಮಿಯನ್ನು ಇಲಾಖೆಗೆ ವರ್ಗಾಹಿಸುವ ಕೆಲಸ ನಡೆಯುತ್ತಿದೆ.
ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಕುವೆಂಪು ವಿದ್ಯಾನಿಲಯಕ್ಕೆ ನೀಡಿರುವ ಭೂಮಿಯ ಬದಲಿಗೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆಯಲ್ಲಿ ಪರ್ಯಾಯ ಭೂಮಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ರೈಲ್ವೇ ಯೋಜನೆಗೆ ವಶಪಡಿಸಿಕೊಂಡಿರುವ ಅರಣ್ಯ ಭೂಮಿಯ ಬದಲಿಗೆ ಕುದುರೆಮುಖದಲ್ಲಿ ಕಂದಾಯ ಇಲಾಖೆಯ ವಶದಲ್ಲಿದ್ದ ಸಾವಿರಾರು ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಾಗಿದೆ.
ಜಿಲ್ಲೆಯ ಹಲವು ತಾಲೂಕಿನಲ್ಲಿ ಸುಮಾರು 80 ಸಾವಿರ ಜನರು ಫಾರಂ 53,57 ರ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಳುಮೆ ಮಾಡುತ್ತಿದ್ದಾರೆ. ಹಕ್ಕು ಪತ್ರಕ್ಕಾಗಿ ಕಾಯುತ್ತಿದ್ದು, ಫಾರಂ 94 ಸಿ ಅಡಿಯಲ್ಲಿ ಸುಮಾರು 8 ಸಾವಿರ ವಸತಿರಹಿತರು ಸಣ್ಣ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಸುಮಾರು 60 ಸಾವಿರ ಜನರು ನಿವೇಶನ ರಹಿತರಾಗಿದ್ದು, ಅವರಿಗೂ ಜಿಲ್ಲಾಡಳಿತ ನಿವೇಶನ ನೀಡಬೇಕು. ಮಲೆನಾಡು ಭಾಗದಲ್ಲಿ ಕಂದಾಯ,ಗೋಮಾಳ, ಕಿರು ಅರಣ್ಯ ಹೆಸರಿನಲ್ಲಿ ಭೂಮಿ ಹೊಂದಿದ್ದು, ಗ್ರಾಮದ ರುದ್ರಭೂಮಿ, ಶಾಲೆ, ಆಸ್ಪತ್ರೆ, ಸಮುದಾಯ ಭವನ ಇತ್ಯಾದಿಗಳಿಗೆ ಭೂಮಿಯ ಅವಶ್ಯಕತೆ ಇದೆ. ಅರಣ್ಯ ಇಲಾಖೆಗೆ ಸಂಬಂಧಪಡದ ಭೂಮಿಯನ್ನು ಇಂತಹ ಕೆಲಸಗಳಿಗೆ ಬಳಸಿಕೊಳ್ಳಬಹುದಾಗಿದೆ. ಆದರೆ ಸರ್ಕಾರ ದಿಢೀರ್ ಕೃಷಿ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡುತ್ತಿರುವುದು ಖಂಡನೀಯ. ಹಾಗಾಗಿ, ಈ ಕೂಡಲೇ ಸರ್ಕಾರ ಈ ವಿಚಾರವನ್ನು ಕೈ ಬಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು.