ಚಿಕ್ಕಮಗಳೂರು:"ಎಂ.ಪಿ.ಕುಮಾರಸ್ವಾಮಿ ಅವರು ನಿನ್ನೆಯಷ್ಟೇ ಪಕ್ಷಕ್ಕೆ ಬಂದಿದ್ದಾರೆ. ಮೊದಲು ಪಕ್ಷದ ಸಿದ್ಧಾಂತವನ್ನು ತಿಳಿದುಕೊಳ್ಳಲಿ. ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ. ಈ ಬಾರಿ ಚುನಾವಣೆಗೆ ಬಿ ಫಾರಂ ನನಗೆ ಕೊಡಬೇಕು" ಎಂದು ಮೂಡಿಗೆರೆಯ ಜೆಡಿಎಸ್ ಘೋಷಿತ ಅಭ್ಯರ್ಥಿ ಬಿ.ಬಿ.ನಿಂಗಯ್ಯ ವರಿಷ್ಠರಿಗೆ ಒತ್ತಾಯಿಸಿದ್ದಾರೆ.
ಬಿಜೆಪಿಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾದ ಎಂ.ಪಿ.ಕುಮಾರಸ್ವಾಮಿ ಅವರಿಗೆ ಮೂಡಿಗೆರೆ ಮೀಸಲು ಕ್ಷೇತ್ರದಿಂದ ಟಿಕೆಟ್ ನೀಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ನಿಂಗಯ್ಯ ಸುದ್ದಿಗಾರೊಂದಿಗೆ ಮಾತನಾಡಿದರು. "ನಾನು ಜೆಡಿಎಸ್ ಪಕ್ಷದಲ್ಲಿ ಕಳೆದ 38 ವರ್ಷಗಳಿಂದ ದುಡಿಯುತ್ತಿದ್ದೇನೆ. ಇದನ್ನು ಗುರುತಿಸಿ ಪಕ್ಷ ನನ್ನನ್ನು ಅಭ್ಯರ್ಥಿಯೆಂದು ಘೋಷಿಸಿತ್ತು. ಆ ಹಿನ್ನಲೆಯಲ್ಲಿ ಪ್ರಚಾರ ಮಾಡಿಕೊಂಡು ಬಂದಿದ್ದೇನೆ, ಈಗಲೂ ನಮ್ಮ ಪಕ್ಷದ ವರಿಷ್ಠರಾದ ದೇವೇಗೌಡರು, ಕುಮಾರಸ್ವಾಮಿ ಅವರ ಮೇಲೆ ವಿಶ್ವಾಸವಿದೆ."