ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ, ಮೂಡಿಗೆರೆ ಇಓ ನೇತೃತ್ವದ ಅಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಅವ್ಯವಸ್ಥೆಯ ಆಗರವಾದ ಕಳಸ ಸರ್ಕಾರಿ ಆಸ್ಪತ್ರೆ..ಅಧಿಕಾರಿಗಳ ಭೇಟಿ, ಪರಿಶೀಲನೆ ಈ ವೇಳೆ ಸಾರ್ವಜನಿಕರು ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು. ಇರುವ ಒಂದು ಆಸ್ಪತ್ರೆಯಲ್ಲಿಯೂ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆ ಪಡೆಯಲು ಬೇರೆಡೆ ಹೋಗೋಣ ಅಂದರೆ ಮಳೆ, ಪ್ರವಾಹದ ಭೀತಿ ಹಾಗೂ ಕೊರೊನಾ ಭಯವಿದೆ. ಇಲ್ಲಿನ ಜನರು ಮಂಗಳೂರು, ಶಿವಮೊಗ್ಗ, ಮೂಡಿಗೆರೆ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಈ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ.
ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳನ್ನು ಸರಿಯಾಗಿ ತಪಾಸಣೆ ನಡೆಸುವುದಿಲ್ಲ. ಆಸ್ಪತ್ರೆಯಲ್ಲಿರುವ ಔಷಧಿಯನ್ನು ನೀಡುವುದಿಲ್ಲ. 2017 ರಿಂದ ಅವಧಿ ಮುಗಿದಿರುವ ಔಷಧಿಗಳನ್ನು ಇನ್ನೂ ವಿಲೇವಾರಿ ಮಾಡಿಲ್ಲ. ನಮಗೆ ಬೇರೆ ವೈದ್ಯರನ್ನು ನೇಮಿಸಿ, ಇಲ್ಲಿರುವ ವೈದ್ಯರು ನಮಗೆ ಆಸ್ಪತ್ರೆಯಲ್ಲಿ ಸಿಗುವುದಿಲ್ಲ. ಕಾಲೇಜು ವಿದ್ಯಾರ್ಥಿಯಂತೆ ಆಸ್ಪತ್ರೆಗೆ ಬಂದು ಹೋಗುತ್ತಾರೆ. ಈ ಆಸ್ಪತ್ರೆಗೆ ರೋಗಿಗಳು ಬಂದರೆ ಸಾಯಲು ಮಾತ್ರ ಬರಬೇಕು ಎಂದು ಸಾರ್ವಜನಿಕರು ಹಾಗೂ ರೋಗಿಗಳು ತಮ್ಮ ಅಳಲನ್ನು ತೋಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈ ಬಗ್ಗೆ ಗಂಭೀರವಾಗಿ ಕ್ರಮ ಕೈಗೊಂಡು ಆಸ್ಪತ್ರೆಯಲ್ಲಿನ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.