ಕರ್ನಾಟಕ

karnataka

By

Published : Aug 13, 2023, 9:43 PM IST

ETV Bharat / state

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಲ್ಲಿ ಹದಗೆಟ್ಟ ರಸ್ತೆಗಳು: ಪೊಲೀಸರು, ಟ್ಯಾಕ್ಸಿ ಚಾಲಕರಿಂದ ದುರಸ್ತಿ

ಟ್ಯಾಕ್ಸಿ ಚಾಲಕರು ಮತ್ತು ಪೊಲೀಸರು ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ದುರಸ್ತಿ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

road-repair-by-policemen-and-taxi-drivers-in-chikkamaguluru
ಚಿಕ್ಕಮಗಳೂರಿನ ಪ್ರವಾಸಿ ತಾಣಗಳಲ್ಲಿ ಹದಗೆಟ್ಟ ರಸ್ತೆಗಳು: ಗುದ್ದಲಿ, ಪಿಕಾಸಿ ಹಿಡಿದ ಪೊಲೀಸರು, ಟ್ಯಾಕ್ಸಿ ಚಾಲಕರಿಂದ ರಸ್ತೆ ದುರಸ್ತಿ

ಚಿಕ್ಕಮಗಳೂರು:ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಬಾಬಾ ಬುಡನ್‍ಗಿರಿ, ಮಾಣಿಕ್ಯಧಾರಾ ಸಂಪರ್ಕಿಸುವ ರಸ್ತೆ ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಗುಂಡಿಮಯವಾಗಿದೆ. ಹದಗೆಟ್ಟ ರಸ್ತೆಯಿಂದಾಗಿ ಶನಿವಾರ ಹಾಗೂ ಭಾನುವಾರ ಪ್ರವಾಸಿಗರು ಪರದಾಡುತ್ತಿದ್ದಾರೆ. ದುರಸ್ತಿಗೆ ಸಂಬಂಧಿಸಿದ ಇಲಾಖೆ ನಿರ್ಲಕ್ಷ್ಯ ವಹಿಸಿದ್ದರಿಂದ ಬೇಸತ್ತ ಸ್ಥಳೀಯ ಟ್ಯಾಕ್ಸಿ ಚಾಲಕರು ಹಾಗೂ ಪೊಲೀಸರು ಇಂದು ಖುದ್ದು ದುರಸ್ತಿ ಮಾಡಿ ಗಮನ ಸೆಳೆದರು.

ಮುಳ್ಳಯ್ಯನಗಿರಿ, ಬಾಬಾ ಬುಡನ್‍ಗಿರಿ ಹಾಗೂ ಮಾಣಿಕ್ಯಧಾರಾ ಚಿಕ್ಕಮಗಳೂರು ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣಗಳು. ಈ ಕಾರಣಕ್ಕೆ ವಾರಾಂತ್ಯದಲ್ಲಿ ಇಲ್ಲಿಗೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಈ ಬಾರಿ ಸುರಿದ ಮಳೆಯಿಂದಾಗಿ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸಂಚಾರ, ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಅದರಲ್ಲೂ ಬಾಬಾ ಬುಡನ್‍ಗಿರಿಯಿಂದ ಮಾಣಿಕ್ಯಧಾರಾ ಸಂಪರ್ಕದ ರಸ್ತೆಯಂತೂ ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಈ ರಸ್ತೆಗಳ ದುರಸ್ತಿಗೆ ಸ್ಥಳೀಯರು ಹಾಗೂ ಸ್ಥಳೀಯ ಬಾಡಿಗೆ ವಾಹನಗಳ ಚಾಲಕರು ಸಂಬಂಧಿಸಿದ ಇಲಾಖೆಗಳಿಗೆ ಮನವಿ ಸಲ್ಲಿಸಿ, ರಸ್ತೆ ದುರಸ್ತಿಗೆ ಆಗ್ರಹಿಸಿದ್ದರು. ಆದರೆ ತಿಂಗಳುಗಳೇ ಕಳೆದರೂ ಇಲಾಖಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸ್ಥಳೀಯ ಟ್ಯಾಕ್ಸಿ ಚಾಲಕರು ಹಾಗೂ ಪೊಲೀಸರು ಹಾರೆ, ಗುದ್ದಲಿ, ಪಿಕಾಸಿ ಹಿಡಿದು ರಸ್ತೆಗಳಲ್ಲಿದ್ದ ಗುಂಡಿಗಳನ್ನು ಮುಚ್ಚುವ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪೊಲೀಸರು ಹಾಗೂ ವಾಹನ ಚಾಲಕರು, ಮಾಲಕರ ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗಲಾದರೂ ಸಂಬಂಧಿಸಿದ ಇಲಾಖಾಧಿಕಾರಿಗಳು ಹದಗೆಟ್ಟ ರಸ್ತೆಗಳ ದುರಸ್ತಿಗೆ ಮುಂದಾಗಬೇಕು ಎಂದು ವಾಹನ ಚಾಲಕರು ಆಗ್ರಹಿಸಿದ್ದಾರೆ. ಇಲಾಖೆ ನಿರ್ಲಕ್ಷ್ಯವಹಿಸಿದಲ್ಲಿ ಪ್ರವಾಸಿಗರು ರಸ್ತೆ ಅವ್ಯವಸ್ಥೆಯ ಕಾರಣಕ್ಕೆ ಜಿಲ್ಲೆಯತ್ತ ಮುಖ ಮಾಡದಿದ್ದರೆ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಡೆತ ಬೀಳಲಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ:C T Ravi: ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು: ಸಿ.ಟಿ.ರವಿ

ಎತ್ತಿನಭುಜ ಚಾರಣಕ್ಕೆ ನಿಷೇಧ: ಮತ್ತೊಂದೆಡೆ, ಜಿಲ್ಲೆಯಲ್ಲಿ ಭಾರಿ ಮಳೆಗೆ ಪ್ರವಾಸಿ ತಾಣಗಳಲ್ಲಿ ಬೆಟ್ಟ ಗುಡ್ಡಗಳು ಕುಸಿಯುವುದು, ಮರಗಳು ಮುರಿದುಬೀಳುವುದು ಇನ್ನೂ ನಿಂತಿಲ್ಲ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಿಗರ ಹಿತದೃಷ್ಠಿಯಿಂದ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ ತಾಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಎತ್ತಿನಭುಜಕ್ಕೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಟ್ರಕ್ಕಿಂಗ್ ತೆರಳಲು ಉತ್ತಮವಾದ ತಾಣವಾಗಿರುವುದರಿಂದ ಜನ ಚಾರಣಕ್ಕೆ ಕೂಡ ಹೋಗುತ್ತಾರೆ. ಆದರೆ, ಮೂಡಿಗೆರೆ ತಾಲೂಕಿನ ಈ ಭಾಗದಲ್ಲಿ ಕಳೆದ 15 ದಿನಗಳಿಂದ ಅತಿಯಾಗಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಬೆಟ್ಟ-ಗುಡ್ಡಗಳು ಕುಸಿಯುತ್ತಿವೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಆದೇಶದಂತೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಕಡಿವಾಣ ಹಾಕಲಾಗಿದೆ.

ABOUT THE AUTHOR

...view details