ಚಿತ್ರದುರ್ಗ:ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಸಾರ್ವಜನಿಕರು ನೀಡಿರುವ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ವಿರುದ್ಧ ಜಿಲ್ಲೆಯಲ್ಲೂ ಪ್ರಕರಣ ದಾಖಲಾಗಿದೆ.
ಪರಿಹಾರ ನಿಧಿಯಲ್ಲಿ ಅವ್ಯವಹಾರ ಆಗಿದೆ ಎಂದು ಕಾಂಗ್ರೆಸ್ ಪಕ್ಷದ ಐಎನ್ಸಿ ಟ್ವಿಟರ್ ಖಾತೆಯಿಂದ ಸರಣಿ ಟ್ವೀಟ್ ಮಾಡುವ ಮೂಲಕ ಜನರ ಹಾದಿ ತಪ್ಪಿಸಿರುವ ಆರೋಪದಡಿ ಪಕ್ಷದ ಟ್ವಿಟರ್ ಖಾತೆ ಹಾಗೂ ಪಕ್ಷದ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಪಿಎಂ ಪರಿಹಾರ ನಿಧಿ ಅವ್ಯವಹಾರ ಆರೋಪ: ಕಾಂಗ್ರೆಸ್ ವಿರುದ್ಧ ಪ್ರಕರಣ ದಾಖಲು ವಕೀಲರಾದ ಧನಂಜಯ್ ಎಂಬುವರು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಎಫ್ಐಆರ್ ಕೂಡ ದಾಖಲಾಗಿದೆ.
ಈ ಕುರಿತು ಬಗ್ಗೆ ಪ್ರತಿಕ್ರಿಯಿಸಿದ ದೂರದಾರ ಧನಂಜಯ್ ಅವರು, ಪಿಎಂ ಪರಿಹಾರ ನಿಧಿಯಲ್ಲಿ ಅವ್ಯವಹಾರ ಆಗಿದೆ ಎಂದು ಐಎನ್ಸಿ (ಇಂಡಿಯನ್ ನ್ಯಾಷನಲ್ ಕಾಂಗ್ರೆಸ್) ಟ್ವಿಟರ್ ಖಾತೆಯಿಂದ ಸರಣಿ ಟ್ವೀಟ್ ಮಾಡುವ ಮೂಲಕ ಜನರನ್ನು ಹಾದಿ ತಪ್ಪಿಸಲಾಗುತ್ತಿದೆ. ಗಣ್ಯ ವ್ಯಕ್ತಿಗಳು ತಮ್ಮ ಸಾಮರ್ಥ್ಯಕ್ಕನುಗುಣವಾಗಿ ನೆರವು ನೀಡಿದ್ದು, ಯಾವುದೇ ಆಧಾರ ಇಲ್ಲದೆ ಆರೋಪ ಮಾಡಿ ಸುಳ್ಳು ಸುದ್ದಿ ಹಬ್ಬಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್ ಖಾತೆ ಮೂಲಕ ಮಾಡಿತ್ತು. ಇದರಿಂದ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಸೋನಿಯಾಗಾಂಧಿ ಹಾಗೂ ಇತರರ ವಿರುದ್ಧ ದೂರು ನೀಡಿರುವುದಾಗಿ ಹೇಳಿದರು.
ಈಗಾಗಲೇ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಇತರರನ್ನು ಆರೋಪಿಯಾಗಿ ಪರಿಗಣಿಸಿ ತನಿಖೆ ಮುಂದುವರೆಸಲು ಹೊಳಲ್ಕೆರೆ ಜೆಎಂಎಫ್ಸಿ ಕೋರ್ಟ್ಗೆ ಪೊಲೀಸರು ಅನುಮತಿ ಕೋರಿ ಮನವಿ ಸಲ್ಲಿಸಿದ್ದಾರೆ ಎಂದು ವಕೀಲ ಧನಂಜಯ್ ಅವರು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.