ಕರ್ನಾಟಕ

karnataka

ETV Bharat / state

ಚಿತ್ರದುರ್ಗ ಜಿಲ್ಲೆಯ ನೀರಾವರಿಗೆ ಕಂಟಕವಾಯ್ತಾ ಭದ್ರಾ ಮೇಲ್ದಂಡೆ ಕಾಲುವೆ ಕಾಮಗಾರಿ?

ಕಳೆದ 13 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣದ ಕಾಮಗಾರಿ ಚಾಲ್ತಿಯಲ್ಲಿದೆ. ಕಾಮಾಗಾರಿ ಮಂದಗತಿಯಲ್ಲಿ ನಡೆಸುತ್ತಿದೆ. ಅಷ್ಟೇ ಅಲ್ಲದೆ ಕಾಮಗಾರಿಗಾಗಿ ಸುರಂಗಗಳನ್ನು ಕೊರೆಯುತ್ತಿದ್ದು, ಇದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದು ಜನರ ಸಂಕಷ್ಟಕ್ಕೆ ಕಾರಣವಾಗಿದೆ.

By

Published : Feb 15, 2021, 11:27 AM IST

ಭದ್ರಾ ಮೇಲ್ದಂಡೆ ಕಾಲುವೆ ಕಾಮಗಾರಿ
Bhadra Overpass Canal Works

ಚಿತ್ರದುರ್ಗ: ಬಯಲುಸೀಮೆ ನಾಡಿಗೆ ನೀರಾವರಿ‌ ಜಾರಿ ಮಾಡುವಂತೆ ಅನ್ನದಾತರು ಹಲವು ವರ್ಷಗಳ ಕಾಲ ಹೋರಾಟ ಮಾಡಿದ್ದರು. ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಲು ಹಸಿರು ನಿಶಾನೆ ತೋರಿತು. ಆದರೆ ಅದೆ ಕಾಲುವೆಯಿಂದ ಕೋಟೆನಾಡಿನ ಕೆಲವು ಗ್ರಾಮಗಳ ಅನ್ನದಾತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಯೋಜನೆ ಸಂಬಂಧ ಮಾತನಾಡಿರುವ ಶಾಸಕ, ರೈತ ಮುಖಂಡ

ಜಿಲ್ಲೆಯಲ್ಲಿ ಕಳೆದ 13 ವರ್ಷಗಳಿಂದ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣದ ಕಾಮಗಾರಿ ಚಾಲ್ತಿಯಲ್ಲಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಚಿತ್ರದುರ್ಗ ನಗರದಲ್ಲಿ ಭದ್ರಾ ಮೇಲ್ದಂಡೆ ಕಚೇರಿ ಕೂಡ ಸ್ಥಾಪಿಸಲಾಗಿದೆ. ಇತ್ತ ಹೊಸದುರ್ಗ ತಾಲೂಕಿನ ಗೂಳಿಹಟ್ಟಿ, ಮಲ್ಲಪ್ಪನಹಳ್ಳಿ, ಮಧುರೆ ಗ್ರಾಮಗಳು ಸೇರಿದಂತೆ ಹಲವು ಭಾಗದಲ್ಲಿ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದ್ದು, ಇನ್ನೊಂದೆಡೆ ಕಾಲುವೆಗೆಗಾಗಿ ಕೊರೆದಿರುವ ಸುರಂಗಗಳಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ‌. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗ್ತಿದೆ.

ಭದ್ರಾ ಮೇಲ್ದಂಡೆ ಕಾಲುವೆ ಕಾಮಗಾರಿ

ಈ ಕುರಿತಂತೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ರೈತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಕಳೆದ ವಾರ ನಡೆದ ಸದನದಲ್ಲಿ ಧ್ವನಿಯೆತ್ತಿದ್ದರು. ಹೊಸದುರ್ಗ ತಾಲೂಕಿನಲ್ಲಿ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣದಿಂದ ಅಂತರ್ಜಲ ಮಟ್ಟ ಕುಸಿತದಿಂದ 8000 ಎಕರೆ ಭೂಮಿ ಬೆಳೆ ಬೆಳೆಯಲು ಕಷ್ಟ ಅನುಭವಿಸುವಂತಾಗಿದೆ. ಸರ್ಕಾರ ತಾಲೂಕಿನ ಕೆರೆಗಳನ್ನು ತುಂಬಿಸುವಂತೆ ಮುಖ್ಯಮಂತ್ರಿ ಬಿಎಸ್​ವೈ ಅವರಿಗೆ ಚಿತ್ರದುರ್ಗ ಶಾಸಕ ಒತ್ತಾಯಿಸಿದರು.

ಭದ್ರಾ ಮೇಲ್ದಂಡೆ ಕಾಲುವೆ ಕಾಮಗಾರಿ

ಕಾಲುವೆ ನಿರ್ಮಾಣಕ್ಕೆ ಕೋಟಿ-ಕೋಟಿ ಹಣ ಖರ್ಚು ಮಾಡಲಾಗಿದೆ. ಆದರೆ ಕೆರೆ ತುಂಬಿಸುವುದಕ್ಕೆ ಸುಮಾರು ನೂರಕ್ಕೂ ಅಧಿಕ ಕೋಟಿ ಹಣ ಖರ್ಚಾಗಬಹುದು ಅದೇನು ಸರ್ಕಾರಕ್ಕೆ ಹೊರೆಯಲ್ಲ ಎಂದು ಸದನದಲ್ಲಿ ಗೂಳಿಹಟ್ಟಿ ಶೇಖರ್ ಸಿಎಂಗೆ ಮನವಿ ಮಾಡಿದ್ದರು.

ರೈತರ ಆರೋಪವೇನು:

ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ಮಾರ್ಚ್ ತಿಂಗಳ ಅಂತ್ಯದವರೆಗೂ ನೀರು ನೀಡಬೇಕಿತ್ತು. ಆದರೆ ಏಕಾಏಕಿ ನೀರು ಸ್ಥಗಿತಗೊಂಡಿದ್ದು, ಜಿಲ್ಲೆಯ ಜನತೆಯ ಕಳವಳಕ್ಕೆ ಕಾರಣವಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಬಳಸಿಕೊಂಡ ಭೂಮಿಗೆ ಪರಿಹಾರ ಸಿಗುತ್ತಿಲ್ಲ ಎಂದು ಆರೋಪಿಸಿ ರೈತರು ಸರ್ಕಾರ ವಿರುದ್ಧ ವಾಕ್ ಪ್ರಹಾರ ನಡೆಸುತ್ತಿದ್ದಾರೆ. ಅಂತರ್ಜಲ ಕುಸಿತ ಕಾಣುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬೇಸಿಗೆ ಆರಂಭ ಮುನ್ನವೇ ರಾಜ್ಯ ಸರ್ಕಾರ ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡಿ ಕೃಷಿ ಚಟುವಟಿಕೆಗಳಿಗೆ ನೀರು ಹರಿಸಬೇಕು.‌ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳಿಗೆ ವೇಗ ಕೊಟ್ಟು ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡುವಂತೆ ರೈತ ಮುಖಂಡರು ಭದ್ರಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details