ಚಿತ್ರದುರ್ಗ: ವಿಶ್ವದಾದ್ಯಂತ ಕೋವಿಡ್-19 ಹರಡುತ್ತಿದ್ದು, ಇದನ್ನು ತಡೆಗಟ್ಟಲು ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಮಸೀದಿಯಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡುವಂತಿಲ್ಲ, ಮನೆಯಲ್ಲಿ ಪ್ರಾರ್ಥನೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಸೂಚನೆ ನೀಡಿದರು.
ಕೊರೊನಾ ವೈರಸ್ ತಡೆಗೆ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ
ಲಾಕ್ಡೌನ್ ಆದೇಶದ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಸಮಾರಂಭಕ್ಕೆ ಬ್ರೇಕ್ ಹಾಕಲಾಗಿದೆ. ಅದರಂತೆ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲು ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರೀಯಾ ಸೂಚಿಸಿದ್ದಾರೆ.
ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ತಡೆಗೆ ಈಗಾಗಲೇ ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ದೇವಸ್ಥಾನ, ಚರ್ಚ್ ಸೇರಿದಂತೆ ಮಸೀದಿಗಳಲ್ಲಿ ಜನರು ಸೇರುವುದು, ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ, ಸಮಾರಂಭ, ಸೇರಿದಂತೆ ಜನರು ಆಗಮಿಸದಂತೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕಿಗೆ ಮರಣಶಾಸನ ಬರೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಒಂದು ದೊಡ್ಡ ಅಸ್ತ್ರ. ಏಪ್ರಿಲ್ 14ರವರೆಗೆ ಯಾರು ಸಹ ಮನೆ ಬಿಟ್ಟು ಹೊರಗೆ ಬರಬಾರದು. ಈಗಾಗಲೇ ಅಗತ್ಯ ವಸ್ತುಗಳ ಪೂರೈಕೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.