ಚಿತ್ರದುರ್ಗ:ಕ್ಷೇತ್ರದ ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು, ನಗರಸಭೆ ಹಾಗೂ ಜಿಪಂ ಸದಸ್ಯರು ಪಟ್ಟು ಹಿಡಿದಿದ್ದಾರೆ.
ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಲೇಬೇಕು.. ಸಿಎಂ ಮೇಲೆ ಬೆಂಬಲಿಗರ ಒತ್ತಡ
ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.
ಉಪಚುನಾವಣೆ ಫಲಿತಾಂಶ ಬಂದ ಬಳಿಕ ಈ ಬೆಳವಣಿಗೆಯಾಗಿದ್ದು, ಬಿಜೆಪಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.. ಹಿರಿಯ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಪಟ್ಟು ಹಿಡಿದಿರುವ ಬೆಂಬಲಿಗರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದರು.
ತಾಲೂಕು ಪಂಚಾಯಿತಿ ಸದಸ್ಯ ನವೀನ್ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಸಚಿವ ಸಂಪುಟವನ್ನು ರಚನೆ ಮಾಡಲಾಗುತ್ತದೆ. ಆದ್ದರಿಂದ ಆರು ಬಾರಿ ಗೆದ್ದಿರುವ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ನವರಿಗೆ ಮನವಿ ಮಾಡಿದರು. ತೀವ್ರವಾಗಿ ಹಿಂದುಳಿದ ಜಿಲ್ಲೆಯಾಗಿರುವ ಚಿತ್ರದುರ್ಗವನ್ನು ಅಭಿವೃದ್ಧಿ ಮಾಡಲು ಸಚಿವ ಸ್ಥಾನ ನೀಡ್ಬೇಕು ಎಂದು ಒತ್ತಾಯಿಸಿದರು.