ಮಂಗಳೂರು: ವಿದ್ಯಾರ್ಥಿಗಳು ಮೊದಲು ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು. ಹಾಗೆಯೇ ಮನೆಯಲ್ಲಿ ಯಾರಾದರೂ ಲಸಿಕೆ ಪಡೆಯದಿದ್ದಲ್ಲಿ ಅವರಲ್ಲೂ ಜಾಗೃತಿ ಮೂಡಿಸಿ ಆಸ್ಪತ್ರೆಗೆ ಕರೆದೊಯ್ದು ಲಸಿಕೆ ಹಾಕಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ದ.ಕ.ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇಂದು ಒಂದೇ ದಿನ 25 ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಮುಂದೆ 1ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಮುಟ್ಟುತ್ತೇವೆ. ಕೋವಿಡ್ ಸೋಂಕಿನ ಮೂರನೆ ಅಲೆ ಎದುರಿಸುವಲ್ಲಿ ಭಾರತ ಸರ್ವ ಸನ್ನದ್ಧವಾಗಿದೆ. ಜನತೆ ಯಾವುದೇ ಭೀತಿಗೊಳಗಾಗುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ಹಾಗೂ ಎಚ್ಚರಿಕೆ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಆದ್ದರಿಂದ ವಿದ್ಯಾರ್ಥಿಗಳು ಕೋವಿಡ್ ಸೋಂಕು ಹರಡದಂತೆ ಮಾಸ್ಕ್, ಸಾಮಾಜಿಕ ಅಂತರ ಕಾಯುವ ನಿಟ್ಟಿನಲ್ಲಿ ಮನೆಯವರಿಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.