ದಕ್ಷಿಣ ಕನ್ನಡ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯೋಗ ಖಾತರಿ ಯೋಜನೆ ಮತ್ತು ಬಸವ ವಸತಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡದೇ, ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ.
ಕೇಂದ್ರ,ರಾಜ್ಯ ಸರ್ಕಾರಗಳು ಹಲವು ಯೋಜನೆಗಳ ಹಣ ಬಿಡುಗಡೆ ಮಾಡದೇ ದ್ವಿಮುಖ ನೀತಿ ಅನುಸರಿಸುತ್ತಿವೆ: ಪಿ.ಪಿ.ವರ್ಗೀಸ್ ಕಡಬದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತ್ ಸದಸ್ಯ ಪಿ.ಪಿ.ವರ್ಗೀಸ್, ಯುಪಿಎ ಸರ್ಕಾರ ಜಾರಿಗೆ ತಂದಿರುವ ಉದ್ಯೋಗ ಖಾತರಿ ಯೋಜನೆಯಿಂದ ಬಡ ಕೂಲಿ ಕಾರ್ಮಿಕರಿಗೆ ಬಹಳಷ್ಟು ಅನುಕೂಲವಾಗಿದೆ. ಆದರೆ, ಕಳೆದ ಅಕ್ಟೋಬರ್ ತಿಂಗಳಿನಿಂದ ಉದ್ಯೋಗ ಖಾತರಿ ಯೋಜನೆಯ ಹಣ ಬಿಡುಗಡೆಯಾಗದೆ, ಕೂಲಿ ಕಾರ್ಮಿಕರು ನರಕಯಾತನೆ ಅನುಭವಿಸುವಂತಾಗಿದೆ. ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಭಿವೃದ್ದಿ ಕಾಮಗಾರಿಗಳೂ ಕುಂಠಿತವಾಗಿದೆ. ತಕ್ಷಣ ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮುತುವರ್ಜಿ ವಹಿಸಬೇಕು ಎಂದು ಒತ್ತಾಯಿಸಿದ್ರು.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಬಸವ ವಸತಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಕಂದಾಯ ಇಲಾಖೆ ಒಪ್ಪಿಸಿ, ದೇಶದ ಕಟ್ಟ ಕಡೆಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಯ ಅಧಿಕಾರವನ್ನು ಕಸಿಯುವ ಯತ್ನ ನಡೆಸಲಾಗುತ್ತಿದೆ. ಅಲ್ಲದೆ, ಬಸವ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ಮಂಜೂರುಗೊಳಿಸದೇ, ಸರ್ಕಾರ ಅನ್ಯಾಯವೆಸಗುತ್ತಿದೆ. ಪ್ರಸಕ್ತವಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗ್ರಾಮೀಣಾಭಿವೃದ್ದಿ ಪಂಚಾಯಿತಿ ರಾಜ್ ಇಲಾಖೆ ಬಗ್ಗೆ ಬಹಳಷ್ಟು ತಿಳಿದುಕೊಂಡವರು. ಆದರೂ ಈ ಬಗ್ಗೆ ಗಮನಹರಿಸದಿರುವುದು ಖೇದಕರ ಎಂದು ಬೇಸರ ವ್ಯಕ್ತಪಡಿಸಿದ್ರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡಿ ಜನ ಮನ್ನಣೆಗಳಿಸಿದೆ. ಆದರೆ ಪ್ರಸ್ತುತವಿರುವ ಬಿಜೆಪಿ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತರದೆ, ಹಿಂದಿನ ಸರ್ಕಾರದ ಯೋಜನೆಗಳ ಹೆಸರು ಬದಲಾವಣೆ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ದೇಶಾದ್ಯಂತ ಆರ್ಥಿಕ ವ್ಯವಹಾರ ಕುಸಿದಿದ್ದು,ದೇಶ ದಿವಾಳಿಯಾಗುತ್ತಿದೆ. ಬಡ ವರ್ಗದ ಜನರಿಗೆ ಜೀವನ ನಡೆಸುವುದೇ ಕಷ್ಟಕರವಾಗಿದೆ. ಇದೆಲ್ಲವನ್ನು ಮರೆಮಾಚಲು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿರುವುದು ಖಂಡನೀಯ. ಈ ಪ್ರವೃತ್ತಿ ಮುಂದುವರಿದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಅನಿವಾರ್ಯ ಎಂದು ಎಚ್ಚರಿಸಿದರು.