ಮಂಗಳೂರು: ಮರವೂರು ಕಿಂಡಿ ಅಣೆಕಟ್ಟಿನಿಂದ ಕಂದಾವರ ಭಾಗದಲ್ಲಿ ಜನವಸತಿ ಪ್ರದೇಶಗಳಿಗೆ ಮತ್ತು ಕೃಷಿ ಪ್ರದೇಶಗಳಿಗೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಪರಿಹಾರ ರೂಪಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರವೂರು ಅಣೆಕಟ್ಟಿನ ಹಿನ್ನೀರಿನ ಪ್ರದೇಶದ ಆಸುಪಾಸಿನಲ್ಲಿರುವ ಕಂದಾವರ, ಅದ್ಯಪಾಡಿ ಪ್ರದೇಶಗಳ ನೂರಾರು ಎಕರೆ ಕೃಷಿ ಭೂಮಿಗಳಲ್ಲಿ ಕಳೆದ ಕೆಲವು ವರ್ಷಗಳಿಂದ ನದಿ ನೀರು ನಿಲ್ಲುತ್ತಿರುವ ಬಗ್ಗೆ ಸ್ಥಳೀಯರಿಂದ ಹಲವು ಅಹವಾಲುಗಳು ಬಂದಿವೆ. ಈ ನಿಟ್ಟಿನಲ್ಲಿ ಸಮಸ್ಯೆಗೆ ಪರಿಹಾರ ಒದಗಿಸಲು ತಾಂತ್ರಿಕ ನಿಪುಣರು, ಇಂಜಿನಿಯರಿಂಗ್ ಅಧಿಕಾರಿಗಳು ಹಾಗೂ ಸ್ಥಳೀಯರನ್ನೊಳಗೊಂಡ ಸಮಿತಿಯನ್ನು ರಚಿಸಿ, ಈ ಸಮಸ್ಯೆಗೆ ಪರಿಹಾರ ನೀಡಲು ಪ್ರಯತ್ನಿಸಲಾಗುವುದು. ಸಮಿತಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಯೋಜನಾ ವರದಿ ಜಿಲ್ಲಾಡಳಿತಕ್ಕೆ ಸಲ್ಲಿಸಲಿದೆ ಎಂದು ತಿಳಿಸಿದರು.