ಕರ್ನಾಟಕ

karnataka

Heavy rain in Coastal Karnataka: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ; ಶಾಲಾ-ಕಾಲೇಜಿಗೆ ರಜೆ, ಪದವಿ ಪರೀಕ್ಷೆಗಳು ಮುಂದೂಡಿಕೆ

By

Published : Jul 25, 2023, 11:12 AM IST

Heavy rain in Coastal Karnataka: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಕೊಂಚ ತಗ್ಗಿದೆ. ಆದ್ರೆ ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

Karnataka Rain Heavy rain in Coastal Karnataka
ದಕ್ಷಿಣ ಕನ್ನಡ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆಯವರೆಗೆ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಇಂದು ಕೊಂಚ ತಗ್ಗಿದೆ. ಆದರೆ ಬಹುತೇಕ ಕಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ಕಡಿಮೆ ಆಗಿಲ್ಲ. ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಜಿಲ್ಲೆಯ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕಡಬ, ಪಾಣೆಮಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 50ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. 19ಕ್ಕೂ ಅಧಿಕ ಮನೆಗಳು ಹಾನಿಗೀಡಾಗಿವೆ. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದರೆ, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ತೀವ್ರ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರಿ ಗಾಳಿ, ಮಳೆಯಿಂದಾಗಿ ಅಲ್ಲಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದರೆ, ಗ್ರಾಮಾಂತರದಲ್ಲಿ ತೋಟಗಾರಿಕಾ ಬೆಳೆ, ಕೃಷಿಗೆ ತೀವ್ರ ಹಾನಿ ಉಂಟಾಗಿದೆ. ನದಿ ಪಾತ್ರದ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. 10ಕ್ಕೂ ಅಧಿಕ ಟ್ರಾನ್ಸ್‌ಫಾರ್ಮರ್ ಕೆಟ್ಟುಹೋಗಿ ಹೆಚ್ಚಿನ ಕಡೆಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿದೆ. ಮರಗಳು ಉರುಳಿ ಹಲವೆಡೆ ಸಂಚಾರಕ್ಕೆ ಅಡ್ಡಿಯಾಗಿದ್ದು, ತೆರವುಗೊಳಿಸಲಾಗಿದೆ.

ನೇತ್ರಾವತಿ ನದಿ 7.9 ಮೀ. (ಅಪಾಯದ ಮಟ್ಟ 8.5ಮೀ.) ಎತ್ತರಕ್ಕೆ ಹರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪಾಣೆಮಂಗಳೂರು, ಆಲಡ್ಕ, ಬಡ್ಡಕಟ್ಟೆ, ಜಕ್ರಿಬೆಟ್ಟು ಕಂಚಿಕಾರಪೇಟೆ ಪ್ರದೇಶದ 20ಕ್ಕೂ ಅಧಿಕ ಕುಟುಂಬವನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಉದ್ದೇಶಿಸಿದ್ದರೂ ಕೆಲವರು ತಮ್ಮ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಗೊಂಡಿದ್ದಾರೆ. ಕಡಬದಲ್ಲಿ 10 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಪದವಿ ಪರೀಕ್ಷೆ ಮುಂದೂಡಿಕೆ:ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜು.25ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಶಾಲೆ, ಕಾಲೇಜುಗಳಿಗೆ ರಜೆ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಅಂಗನವಾಡಿಗಳು, ಶಾಲೆ, ಪಿಯು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿ ಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಸುಬ್ರಹ್ಮಣ್ಯ ಪರಿಸರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಕುಮಾರಧಾರಾ ನದಿ ನೀರು ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರ ಸ್ನಾನಘಟ್ಟ ಸತತ ನಾಲ್ಕನೇ ದಿನವೂ ಮುಳುಗಡೆಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ಭಕ್ತರು ನೀರಿಗೆ ಇಳಿಯದಂತೆ ಪೊಲೀಸರು, ಗೃಹರಕ್ಷಕ ದಳದ ಸಿಬ್ಬಂದಿ ಕಾವಲು ಕಾಯುತ್ತಿದ್ದಾರೆ. ಕುಕ್ಕೆ ಸುಬ್ರಹಣ್ಯದ ಸ್ನಾನಘಟ್ಟದ ಬಳಿ ರಸ್ತೆ ಕುಸಿದಿದ್ದು, ಕುಸಿದ ಭಾಗಕ್ಕೆ ವಾಹನಗಳು ತೆರಳದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Karnataka Rains: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಅಪಾಯ ಮಟ್ಟ ಮೀರಿದ ಅಘನಾಶಿನಿ, ಗಂಗಾವಳಿ ನದಿ; ಶಾಲಾ-ಕಾಲೇಜುಗಳಿಗೆ ರಜೆ

ABOUT THE AUTHOR

...view details