ಕರ್ನಾಟಕ

karnataka

ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹೋತ್ಸವ: 201 ಜೋಡಿ ಗೃಹಸ್ಥಾಶ್ರಮಕ್ಕೆ, ನಟ ದರ್ಶನ್ ಭಾಗಿ

By

Published : May 4, 2023, 7:27 AM IST

ಧರ್ಮಸ್ಥಳದಲ್ಲಿ ಬುಧವಾರ ಸಾಮೂಹಿಕ ವಿವಾಹೋತ್ಸವ ಜರುಗಿತು.

ಸಾಮೂಹಿಕ ವಿವಾಹ ಕಾರ್ಯಕ್ರಮ
ಸಾಮೂಹಿಕ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ನಿನ್ನೆ ಸಂಜೆ (ಬುಧವಾರ) ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇದಕ್ಕೂ ಮುನ್ನ, ಭವ್ಯ ಮೆರವಣಿಗೆಯಲ್ಲಿ ನೂತನ ವಧು-ವರರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಆಗಮಿಸಿದರು. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ನಟ ದರ್ಶನ್ ತೂಗುದೀಪ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ನವ ಜೋಡಿಗಳಿಗೆ ಮಂಗಳಸೂತ್ರ ವಿತರಿಸಿದರು. ವೇದ, ಮಂತ್ರ ಘೋಷ ಪಠಣದೊಂದಿಗೆ ವಧು-ವರರಿಗೆ ಮಂಗಳಸೂತ್ರ ಧಾರಣೆ ಮಾಡಿ, ಆಯಾ ಜಾತಿಯ ಸಂಪ್ರದಾಯದಂತೆ ಮದುವೆಯ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಕೇರಳದಿಂದ 6, ಆಂಧ್ರ ಪ್ರದೇಶದ ಇಬ್ಬರು ಸಾಮೂಹಿಕ ವಿವಾಹದಲ್ಲಿ ಮದುವೆಯಾದರು.

ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಸಮಾರಂಭ

"ದಾಂಪತ್ಯಕ್ಕೆ ಕಾಲಿಟ್ಟ ಗೃಹಿಣಿ ಭಾಗ್ಯಲಕ್ಷ್ಮಿಯಾಗಿ ಮನೆ ಬೆಳಗಿ ಸ್ವರ್ಗವನ್ನಾಗಿ ಮಾಡುತ್ತಾಳೆ. ಪತಿ-ಪತ್ನಿ ಪರಸ್ಪರ ಹೊಂದಾಣಿಕೆ, ತಾಳ್ಮೆ ಮತ್ತು ಸಹನೆಯಿಂದ ಸುಖ-ಕಷ್ಟಗಳನ್ನು ಸಮನಾಗಿ ಸ್ವೀಕರಿಸಿ ಅನುಭವಿಸಿ, ಸಾರ್ಥಕ ದಾಂಪತ್ಯ ಜೀವನ ನಡೆಸಬೇಕು. ಆಗ ಮನೆಯೇ ಮಂದಿರವಾಗುತ್ತದೆ. ಸ್ವರ್ಗ ಸುಖವನ್ನು ಅನುಭವಿಸಬಹುದು" ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ನೂತನ ದಂಪತಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರದ್ಧಾ ಅಮಿತ್, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು. ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಧನ್ಯವಾದವಿತ್ತರು. ದಿವ್ಯ ಕುಮಾರಿ ನಿರೂಪಿಸಿದರು.

ಇದನ್ನೂ ಓದಿ:ಸರ್ವ ಧರ್ಮಗಳ ಸಾಮೂಹಿಕ ವಿವಾಹ: ಕಾಂಗ್ರೆಸ್ ಮುಖಂಡನಿಂದ ನವ ಜೋಡಿಗಳಿಗೆ ಭರ್ಜರಿ ಉಡುಗೊರೆ

ABOUT THE AUTHOR

...view details