ಮಂಗಳೂರು: ದಿವ್ಯಾಂಗ ಚೇತನರಿಗೆ ಕೃತಕ ಉಪಕರಣಗಳನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದ.ಕ.ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಾಡಿದರು.
ಕೃತಕ ಅಂಗಾಂಗ ತಯಾರಿಕಾ ಕಾರ್ಪೊರೇಷನ್ ಆಫ್ ಇಂಡಿಯಾ ಇದರ ಅಡಿಯಲ್ಲಿ ದ.ಕ.ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಎಂಆರ್ಪಿಲ್ ವತಿಯಿಂದ ಈ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.
ದಿವ್ಯಾಂಗರಿಗೆ ಕೃತಕ ಉಪಕರಣ ವಿತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ವಿಕಲಚೇತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರದಿಂದ ಅನೇಕ ಯೋಜನೆಗಳಲ್ಲಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅದರ ಜೊತೆಯಲ್ಲಿ ವಿವಿಧ ಇಲಾಖೆಯಲ್ಲಿ ಅವರಿಗೆ ಸರ್ಕಾರಿ ಹುದ್ದೆಗಳ ಅವಕಾಶ ನೀಡಿ ಸ್ವಾವಲಂಬಿಗಳಾಗಿ ಜೀವನ ಸಾಗಿಸಲು ಸಹಕಾರಿಸಲಾಗುತ್ತಿದೆ. ವೈದ್ಯಾಧಿಕಾರಿಗಳು ಅಂಗವಿಕಲ ಪ್ರಮಾಣ ಪತ್ರವನ್ನು ನೀಡುವ ಸಂದರ್ಭದಲ್ಲಿ ಕೇವಲ ಅಂಕಗಳನ್ನು ಆಧರಿಸದೆ ವಿಕಲತೆಯನ್ನು ಮನಗೊಂಡು ಅವರಿಗೆ ಪ್ರಮಾಣ ಪತ್ರ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಶೇಕಡಾ 75 ರಷ್ಟು ಪಾರ್ಶ್ವವಾಯುವಿನಿಂದ ಬಳಲುವವರಿಗೆ ದಿವ್ಯಾಂಗ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುವುದು. ಆನೆಕಾಲು ರೋಗಕ್ಕೆ ಒಳಗಾದವರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ನೀಡಿದೆ. ಅಂಗವಿಕಲರಿಗೆ ದೊರಕುವ ಎಲ್ಲಾ ಸೌಲಭ್ಯಗಳನ್ನು ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ನೀಡಬೇಕು. ಮೀಸಲಾತಿಯನ್ನು ಮತ್ತಷ್ಟು ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿಯನ್ನು ಮಾಡಲಾಗುವುದು. ಆರೋಗ್ಯ ಇಲಾಖೆ, ವಿಕಲಚೇತನರ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಒಗ್ಗೂಡಿ ಜಿಲ್ಲೆಯಲ್ಲಿ ಸರ್ಕಾರದಿಂದ ಸೌಲಭ್ಯಗಳನ್ನು ಪಡೆದವರ ಪಟ್ಟಿ ಮಾಡಬೇಕು. ಸೌಲಭ್ಯದಿಂದ ಯಾರು ಕೂಡ ವಂಚಿತರಾಗಬಾರದು. ಎಲ್ಲಾ ವಿಕಲಚೇತನರಿಗೆ ಸರ್ಕಾರದ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅಧಿಕಾರಿಗಳು ಸರ್ವೇ ನಡೆಸಿ ವರದಿಯನ್ನು ಸಿದ್ಧಪಡಿಸಬೇಕು ಎಂದು ಸಚಿವರು ತಿಳಿಸಿದರು.
12 ಮಂದಿ ದಿವ್ಯಾಂಗರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ, 10 ಮಂದಿ ಫಲಾನುಭಾವಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಯಿತು. ಅಲ್ಲದೆ 549 ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಕಿವಿಯ ಸಾಧನ, ವಾಕಿಂಗ್ ಸ್ಟಿಕ್, ವ್ಹೀಲ್ ಚೆಯರ್, ಕೃತಕ ಕಾಲು ಮುಂತಾದ ವಿವಿಧ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು. ಇದರಲ್ಲಿ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಲ್ಯಾಪ್ ಟಾಪ್ ಅನ್ನು ಸರ್ಕಾರದ ವತಿಯಿಂದ ನೀಡಲಾಗಿದ್ದರೆ. ಉಳಿದ ಕೃತಕ ಸಾಧನಗಳನ್ನು ಎಂಆರ್ ಪಿಎಲ್ 45 ಲಕ್ಷ ರೂ. ವೆಚ್ಚದಲ್ಲಿ ವಿತರಿಸಿದೆ.
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಪಂ ಅಧ್ಯಕ್ಷ ಮಹಮ್ಮದ್ ಮೋನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಡಿ. ಯಮುನಾ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.