ಪುತ್ತೂರು :ತಾನು ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ಅದರ ಮಾಲೀಕನೇ ಬೆಂಕಿ ಹಚ್ಚಿ ಅಂಗಡಿಯೊಳಗಿನ ಸಾಮಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ವಿಚಿತ್ರ ಘಟನೆ ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಘಟನೆ ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಮಾವಿನಕಟ್ಟೆ ನಿವಾಸಿ ಮಹಮ್ಮದ್ ತನ್ನ ಅಂಗಡಿಗೆ ಬೆಂಕಿ ಹಚ್ಚಿದವರು. ಕಳೆದ ನಾಲ್ಕು ವರ್ಷಗಳಿಂದ ಇದೇ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಇವರು ಲಾಕ್ಡೌನ್ ಬಳಿಕ ಅಂಗಡಿ ತೆರದಿದ್ದರು. ಸ್ಟೇಶನರಿ ಸಾಮಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡ ಇದರೊಳಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್, ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ಏಕಾಏಕಿ ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಬೆಂಕಿ ಹಾಕುತ್ತಿದ್ದ ದೃಶ್ಯ ಕಂಡ ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದರು. ಆ ವೇಳೆ ಬೆಂಕಿ ನಂದಿಸದಂತೆ ಮಾಲೀಕ ಮಹಮ್ಮದ್ ತಡೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನನ್ನ ಅಂಗಡಿ ನಾನು ಏನು ಬೇಕಾದ್ರೂ ಮಾಡುತ್ತೇನೆ, ಬೆಂಕಿ ಹಚ್ಚಿದ್ದೇನೆ, ಸುಟ್ಟು ಭಸ್ಮವಾಗಲಿ ನಿಮಗೇನು? ಎಂದು ಹೇಳಿ ತಡೆದು ಅಂಗಡಿ ಹೊತ್ತಿ ಉರಿಯುತ್ತಿದ್ದಂತೆ ನೇರ ಮನೆ ಕಡೆ ತೆರಳಿದ್ದಾರೆ.
ಆದರೆ, ಸ್ಥಳೀಯರು ಮಹಮ್ಮದ್ ಮನೆಗೆ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ. ಈ ವೇಳೆಗೆ ಸ್ಥಳೀಯರು ಪೊಲೀಸರಿಗೂ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸ್ ಠಾಣಾ ಎಎಸ್ಐ ತಿಮ್ಮಯ್ಯಗೌಡ, ಈಶ್ವರಮಂಗಲ ಹೊರಠಾಣಾ ಪೊಲೀಸ್ ಸಿಬ್ಬಂದಿ ಬಸವರಾಜ್, ಪ್ರಶಾಂತ್ ಮತ್ತಿತರರು ಆಗಮಿಸಿ ಬೆಂಕಿ ನಂದಿಸಲು ಸಹಕಾರ ನೀಡಿದರು.