ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಕಚೇರಿಯನ್ನು ಬೆಂದೂರ್ ವೆಲ್ನಲ್ಲಿರುವ ಬಾರ್ ಮತ್ತು ವೈನ್ ವ್ಯವಹಾರ ನಡೆಸುವ ವ್ಯಕ್ತಿಯೊಬ್ಬರಿಗೆ ಸೇರಿದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ನಿರ್ಮಿಸಲಾಗಿದೆ. ಇದು ಕಾಂಗ್ರೆಸ್ ಅಭ್ಯರ್ಥಿಯ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಅಲ್ಲದೆ ಇದು ಕಾಂಗ್ರೆಸ್ನವರ ನೈಜ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ನಗರದ ಬಂಟ್ಸ್ ಹಾಸ್ಟೆಲ್ನಲ್ಲಿರುವ ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಹಲವು ವರ್ಷಗಳಿಂದ ಗಾಂಧಿ ಕುಟುಂಬ ಪ್ರತಿನಿಧಿಸುವ ಅಮೇಠಿ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ರಾಹುಲ್ ಗಾಂಧಿಗೆ ಸಿಕ್ಕಿರುವ ಸ್ಥಾನ 350ನೇ ಸ್ಥಾನ. ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ದ.ಕ. ಜಿಲ್ಲೆಗೆ 16 ಸಾವಿರ 550 ಕೋಟಿ ರೂ. ತಂದಿದ್ದಾರೆ. ಆದರೆ ಅಮೇಠಿ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಕೊಟ್ಟದ್ದು ಕೇವಲ 385 ಕೋಟಿ ರೂ. ಮಾತ್ರ. 15 ವರ್ಷಗಳಲ್ಲಿ ರಾಹುಲ್ ಗಾಂಧಿ ಅಮೇಠಿ ಕ್ಷೇತ್ರದಲ್ಲಿ ಏನು ಮಾಡಿದ್ದಾರೆ. ಅಲ್ಲದೆ ಈ ಹಿಂದೆ ಸೋನಿಯಾ ಗಾಂಧಿ, ರಾಜೀವ್ ಗಾಂಧಿಯವರು ಪ್ರತಿನಿಧಿಸಿದ ಕ್ಷೇತ್ರ ಅಮೇಠಿ. ಇಲ್ಲಿ ಯಾವ ಅಭಿವೃದ್ಧಿ ಆಗಿದೆ. ಹಾಗಾದರೆ ನಳಿನ್ ಕುಮಾರ್ ಕಟೀಲು ಅವರಿಗೆ ಕಾಂಗ್ರೆಸ್ನವರು ಮಾತನಾಡುವುದರಲ್ಲಿ ಯಾವುದೇ ಹುರುಳಿಲ್ಲ.