ಮಂಗಳೂರು:ಪಾನಮತ್ತನಾಗಿ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಯುವತಿಯೊಬ್ಬಳ ಸಾವಿಗೆ ಕಾರಣವಾದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ, ಅಪರಾಧಿಗೆ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ನಾಲ್ಕನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಹಳೇ ಹುಬ್ಬಳ್ಳಿ ಜಂಗಲೀಪೇಟೆ ನಿವಾಸಿ ಸುಮಿಯ್ ಮೊರಾಬ್(28) ಶಿಕ್ಷೆಗೊಳಗಾದ ಅಪರಾಧಿ. ಈತ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿ ಯುವತಿ ಸಾವಿಗೆ ಕಾರಣವಾದ ಪ್ರಕರಣವನ್ನು ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿದರು. ಬಳಿಕ ತೀರ್ಪು ನೀಡಿ ಅಪರಾಧಿಗೆ ಭಾರತೀಯ ದಂಡ ಸಂಹಿತೆ ಕಲಂ 304ಎ (ನಿರ್ಲಕ್ಷ್ಯದ ಚಾಲನೆ) ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 5ಸಾವಿರ ರೂ. ದಂಡ, ದಂಡ ಕಟ್ಟಲು ವಿಫಲವಾದಲ್ಲಿ 1ತಿಂಗಳ ಸಜೆ, ಐಪಿಸಿ 279ರಡಿ (ಸಾರ್ವಜನಿಕ ಸ್ಥಳದಲ್ಲಿ ಮಾನವ ಜೀವಕ್ಕೆ ಅಪಾಯ ರೀತಿ ಚಾಲನೆ) 3 ತಿಂಗಳು ಸಾದಾ ಸಜೆ, 1ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 15 ದಿನ ಕಾರಾಗೃಹ ಶಿಕ್ಷೆ, ಐಪಿಸಿ 337 (ಸಾದಾ ಗಾಯ)ಅಡಿ 3 ತಿಂಗಳು ಸಜೆ, 500 ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತರ ಪರವಾಗಿ ಸರ್ಕಾರಿ ಅಭಿಯೋಜಕ ಹರಿಶ್ಚಂದ್ರ ಉದ್ಯಾವರ ವಾದ ಮಂಡಿಸಿದರು.