ದಾವಣಗೆರೆ:ಪರಿಶಿಷ್ಟ ಪಂಗಡಕ್ಕೆ ಶೇಕಡಾ 7.5 ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಂಡ ಬೆನ್ನಲ್ಲೇ ಸರ್ಕಾರ ಮೀಸಲಾತಿ ಮಾರ್ಪಡಿಸುತ್ತೇವೆ ಎಂದು ಒಂದು ತಿಂಗಳು ಟೈಮ್ ಕೇಳಿತ್ತು. ಆದರೆ, ಒಂದು ತಿಂಗಳು ಕಳೆಯುತ್ತಾ ಬಂದರೂ ಸರ್ಕಾರ ಈ ಬಗ್ಗೆ ತಲೆಕೆಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮತ್ತೆ ಪ್ರತಿಭಟನೆ ನಡೆಸಲು ವಾಲ್ಮೀಕಿ ಶ್ರೀ ರೂಪರೇಷೆ ಸಿದ್ಧಪಡಿಸುತ್ತಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಿಂದ ಬೆಂಗಳೂರಿನವರಿಗೆ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಶ್ರೀಗಳು ಪಾದಯಾತ್ರೆ ನಡೆಸಿದ್ದರು. ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದು ಮತ್ತು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಿಸಿ ಪಾದಯಾತ್ರೆ ನಡೆಸಲಾಗಿತ್ತು. ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಹಿನ್ನೆಲೆ ಸರ್ಕಾರ ಬೇಡಿಕೆಗೆ ಒಪ್ಪಿ ಒಂದು ತಿಂಗಳು ಕಾಲಾವಕಾಶ ಕೇಳಿತ್ತು. ಆದರೆ, ಒಂದು ತಿಂಗಳು ಕಳೆಯುತ್ತಾ ಬಂದರೂ, ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ದಾವಣಗೆರೆ ತಾಲೂಕಿನ ರಾಜನಹಳ್ಳಿ ಗ್ರಾಮದ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಕುರಿತ ಜಿಲ್ಲಾ ಮಟ್ಟದ ಸಭೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.