ಹರಿಹರ :ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗು ಗ್ರಾಮೀಣ ಪ್ರದೇಶದ ರೈತರಿಗೆ ಅನುಕೂಲದ ದೃಷ್ಟಿಯಿಂದ ಹಾಗೂ ಶಿವಮೊಗ್ಗ ರಸ್ತೆಯಲ್ಲಿನ ಜನದಟ್ಟಣೆಯ ನಿಯಂತ್ರಣಕ್ಕಾಗಿ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರದಲ್ಲಿ ಆದ್ಯತೆ ನೀಡಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಎಸ್.ರಾಮಪ್ಪ ಹೇಳಿದರು.
ನಗರದ ರಚನಾ ಕ್ರೀಡಾ ಟ್ರಸ್ಟ್ ಬಳಿ ನಗರಸಭೆ ವತಿಯಿಂದ ದೀನದಯಾಳ್ ಯೋಜನೆಯಡಿಯ 47 ಲಕ್ಷ ರೂ, ಅನುದಾನದ 36 ಮಳಿಗೆಗಳ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಗರದ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನು ತರುವ ಆಲೋಚನೆ ಇದ್ದು, ಅನೇಕ ಯೋಜನೆಗಳು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.
ನಗರದ ಹೃದಯಭಾಗದಲ್ಲಿರುವ ಆರೋಗ್ಯ ಇಲಾಖೆಯ ಆವರಣದಲ್ಲಿನ ಖಾಲಿ ಜಾಗದಲ್ಲಿ ಆಧುನಿಕ ಸೌಲಭ್ಯಗಳುಳ್ಳ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಆದಷ್ಟು ಬೇಗನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದರು.