ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಆಡಳಿತಾರೂಢ ಬಿಜೆಪಿ ಕೇವಲ 66 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ. ಈಗಾಗಲೇ ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಕುರಿತು ಕಸರತ್ತು ನಡೆಯುತ್ತಿದ್ದು, ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ.
ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅದರಂತೆ ಬಿಜೆಪಿ ಶಾಸಕ ಎಸ್.ವಿ ರಾಮಚಂದ್ರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಬಿ. ದೇವೇಂದ್ರಪ್ಪ ಗೆಲುವು ಸಾಧಿಸಿದ್ದಾರೆ. ನಿವೃತ್ತ ಜವಾನರಾಗಿರುವ ಬಿ. ದೇವೇಂದ್ರಪ್ಪ ಅವರು ಕೇವಲ 874 ಮತಗಳಿಂದ ರಾಮಚಂದ್ರ ಅವರನ್ನು ಸೋಲಿಸಿದ್ದಾರೆ.
ಜಗಳೂರು ಕ್ಷೇತ್ರದಿಂದ ಗೆದ್ದ ಬಿ.ದೇವೇಂದ್ರಪ್ಪ ಅವರು ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಜನಿಸಿದರು. ಬುಡಕಟ್ಟು ಕುಟುಂಬದಲ್ಲಿ ಜನಿಸಿದ ಅವರು ಮೂರು ದಶಕಗಳ ಕಾಲ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಜವಾನರಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಜಗಳೂರು ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಸಾಕಷ್ಟು ಟಿಕೆಟ್ ಆಕಾಂಕ್ಷಿಗಳ ನಡುವೆ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡು ಚುನಾವಣಾ ಅಖಾಡಕ್ಕಿಳಿದಿದ್ದ ದೇವೇಂದ್ರಪ್ಪ ಅವರು ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ ಶಾಸಕ ಎಸ್ ವಿ ರಾಮಚಂದ್ರ ಅವರಿಗೆ ಸೋಲಿನ ರುಚಿ ತೋರಿಸಿದ್ದಾರೆ.