ಕರ್ನಾಟಕ

karnataka

By

Published : May 16, 2020, 4:36 PM IST

ETV Bharat / state

ಜೂನ್​​ ಮೊದಲ ವಾರದಲ್ಲಿ ಮಳೆ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಸೂಚನೆ

ಜೂನ್ ಮೊದಲ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಹಾನಿ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಆಯಾ ತಾಲೂಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

DC Meeting with officers in Davanagere
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ತಹಶೀಲ್ದಾರರು ತಮ್ಮ ತಾಲೂಕಿನ ಜನ, ಜಾನುವಾರು ಸೇರಿದಂತೆ ಯಾವುದೇ ರೀತಿಯ ಹಾನಿ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣೆ ಮುಂಜಾಗ್ರತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿದಿನ 12 ಗಂಟೆ ಒಳಗಾಗಿ ದೂರವಾಣಿ ಕರೆ ಮಾಡಿ ಎಲ್ಲಾ ತಹಶೀಲ್ದಾರರು ತಾಲೂಕಿನಲ್ಲಿ ಆಗಿರುವ ಮಳೆಯ ಪ್ರಮಾಣ, ಹಾನಿ ವಿವರಗಳು ಮತ್ತು ನದಿ ನೀರಿನ ಮಟ್ಟದ ವರದಿಯನ್ನು ಉಪ ವಿಭಾಗಾಧಿಕಾರಿಗಳ ಮೂಲಕ ಸಲ್ಲಿಸಬೇಕು. ಜೀವ ಹಾನಿ ಮತ್ತು ಸಾರ್ವಜನಿಕರಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜಾನುವಾರು ಹಾನಿಗೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಎನ್‍ಡಿಆರ್​​ಎಫ್​​ ಮಾರ್ಗಸೂಚಿ ಅನ್ವಯ ಪರಿಹಾರ ಒದಗಿಸಬೇಕು ಎಂದರು.

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ

ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ವಿಪತ್ತು ನಿರ್ವಹಣೆಗಾಗಿ ತಲಾ 30 ಲಕ್ಷ ರೂ. ನೀಡಿದ್ದೇವೆ. ಇದನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಬೆಳೆಹಾನಿ ಕುರಿತು ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಜಂಟಿಯಾಗಿ ಕಾಲ ಕಾಲಕ್ಕೆ ಸಮೀಕ್ಷೆ ನಡೆಸಿ ಬೆಳೆ ಹಾನಿ ಕುರಿತಾಗಿ ವರದಿ ಸಲ್ಲಿಸಬೇಕು ಎಂದ ಅವರು, ಗ್ರಾಮ ಲೆಕ್ಕಿಗರು ಮತ್ತು ಕಂದಾಯ ನಿರೀಕ್ಷಕರು ಹಾಗೂ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇದ್ದು, ಪರಿಸ್ಥಿತಿಯನ್ನು ಸರ್ಮಪಕವಾಗಿ ನಿಭಾಯಿಸಬೇಕು. ಪ್ರವಾಹ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ, ಜನರನ್ನು ಸ್ಥಳಾಂತರ ಮಾಡುವುದು, ಪರಿಹಾರ ಕೇಂದ್ರ ತೆರೆಯುವ ಬಗ್ಗೆ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಮಾಹಿತಿ ನೀಡಿ, ಅಕಾಲಿಕ ಮಳೆಯ ಹಾನಿ ಕುರಿತು ಸರ್ಕಾರಕ್ಕೆ ವರದಿ ನೀಡಲಾಗಿದೆ. ಭತ್ತದ ಬೆಳೆ ಹೆಚ್ಚು ಹಾನಿಯಾಗಿದ್ದು, ದಾವಣಗೆರೆ ತಾಲೂಕು 355 ಹೆಕ್ಟೇರ್, ಹರಿಹರ 86 ಹೆಕ್ಟೇರ್, ಹೊನ್ನಾಳಿ 24 ಹೆಕ್ಟೇರ್, ನ್ಯಾಮತಿ ತಾಲೂಕಿನಲ್ಲಿ 266 ಹೆಕ್ಟೇರ್ ಭತ್ತದ ಬೆಳೆ ಹಾನಿಯಾಗಿದೆ ಎಂದರು.

ತೋಟಗಾರಿಕೆ ಇಲಾಖೆ ಉಪ ನಿರ್ದೆಶಕ ಲಕ್ಷ್ಮೀಕಾಂತ್ ಬೊಮ್ಮನ್ನಾರ್ ಮಾತನಾಡಿ, ಜಿಲ್ಲೆಯಲ್ಲಿ 38 ಹೆಕ್ಟೇರ್​ ಪ್ರದೇಶದಲ್ಲಿ ಅಡಿಕೆ ನಾಶವಾಗಿದೆ. ರೈತರ ಬಾಳೆ ನಾಶವಾದರೆ 12,500 ರೂ. ಪರಿಹಾರ ನೀಡಲಾಗುವುದು ಹಾಗೂ ಅಡಿಕೆ ಬೆಳೆಗಾರರಿಗೆ 18,000 ರೂ. ಪರಿಹಾರ ನೀಡಲಾಗುವುದು ಮತ್ತು ಹೂ ಬೆಳೆಗಾರರಿಗೆ ಹೆಕ್ಟೇರ್​ಗೆ 25,000 ರೂ. ಪರಿಹಾರ ನೀಡಲಾಗುವುದು ಎಂದರು.

ABOUT THE AUTHOR

...view details