ದಾವಣಗೆರೆ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಸಹಿಸಲ್ಲ. ಈಗಾಗಲೇ ಐವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದು ಪುನರಾವರ್ತನೆಯಾದರೆ ಅವರಿರುವ ಹುದ್ದೆಗಳಿಂದಲೇ ಗೇಟ್ ಪಾಸ್ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಹುದ್ದೆಗಳಿಂದಲೇ ಗೇಟ್ ಪಾಸ್ ದಾವಣಗೆರೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಎಪ್ರಿಲ್ 13 ರಂದು ಕೆ. ಆರ್. ಪೇಟೆಗೆ ಆಗಮಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ. ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ಪಕ್ಷದ ತೀರ್ಮಾನದಂತೆ ಕೆಲಸ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯ. ಮಂಡ್ಯ ಕಾಂಗ್ರೆಸ್ನಲ್ಲಿ ಕೆಲವರು ಪಕ್ಷದ ತೀರ್ಮಾನ ವಿರೋಧಿಸಿರುವುದ ನಿಜ. ಇದು ನಮ್ಮ ಗಮನಕ್ಕೆ ಬಂದಿದೆ. ಹಾಗೆಂದ ಮಾತ್ರಕ್ಕೆ ಎಲ್ಲರೂ ವಿರೋಧಿಸುತ್ತಿಲ್ಲ. ನಿಖಿಲ್ ಕುಮಾರಸ್ವಾಮಿ ಗೆಲ್ಲುವುದು ನಿಶ್ಚಿತವೆಂದು ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.
ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ವಿರುದ್ಧ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ. ಹಾಗೆಂದ ಮಾತ್ರಕ್ಕೆ ತಪ್ಪು ಸಾಬೀತಾಗಿದೆ ಅಂತೇನಿಲ್ಲ. ಈಗಾಗಲೇ ವಿನಯ್ ಕುಲಕರ್ಣಿ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.ಎಫ್ಐಆರ್ ಅಷ್ಟೇ ಆಗಿರುವುದು ಸಮಸ್ಯೆ ಏನಿಲ್ಲ ಎಂದುಕೆಪಿಸಿಸಿ ಅಧ್ಯಕ್ಷ ಅಭಿಪ್ರಾಯಪಟ್ಟರು.
ವಿನಯ್ ಕುಲಕರ್ಣಿ ವಿರುದ್ಧ ಪ್ರಕರಣ ದಾಖಲಾಗಿರುವುದರಿಂದ ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ. ಈ ಬಗ್ಗೆ ಸಮಗ್ರ ವಿಚಾರಣೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.