ದಾವಣಗೆರೆ:ಪೊಲೀಸ್ ಇಲಾಖೆಯಲ್ಲಿದ್ದವರು ಒಂದೇ ಊರಿನಲ್ಲಿ ನೆಲೆ ನಿಲ್ಲಲು ಸಾಧ್ಯವಿಲ್ಲ. ಪೊಲೀಸರ ಮಕ್ಕಳ ಶಿಕ್ಷಣಕ್ಕೂ ಕೂಡ ಒಂದೂರು ಬಿಟ್ಟು ಮತ್ತೊಂದೂರಿನ ಶಾಲೆಗಳಿಗೆ ಬದಲಾವಣೆ ಅನಿವಾರ್ಯ. ಇಂತಹ ಪರಿಸ್ಥಿತಿ ಮನಗಂಡ ಇಲಾಖೆ ದಾವಣಗೆರೆಯಲ್ಲಿ ಮಕ್ಕಳಿಗಾಗಿಯೇ ಪೊಲೀಸ್ ಪಬ್ಲಿಕ್ ವಸತಿ ಶಾಲೆ ನಿರ್ಮಿಸಿದ್ದು, ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಲೋಕಾರ್ಪಣೆ ಮಾಡಲಿದ್ದಾರೆ.
ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಜ್ಯದ ಪೂರ್ವ ವಲಯದಲ್ಲಿ ಬರುವ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಿಗೆ ದಾವಣಗೆರೆಯನ್ನು ಕೇಂದ್ರವನ್ನಾಗಿಟ್ಟುಕೊಂಡು ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಹೊರವಲಯದಲ್ಲಿ 10 ಎಕರೆ ವಿಸ್ತೀರ್ಣದಲ್ಲಿ 15 ಕೋಟಿ ವೆಚ್ಚದಲ್ಲಿ ಪೊಲೀಸ್ ಪಬ್ಲಿಕ್ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ.
ಇಲ್ಲಿ 200 ವಿದ್ಯಾರ್ಥಿಗಳು 100 ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಶಿಕ್ಷಣವನ್ನು ಅತಿ ಕಡಿಮೆ ದರದಲ್ಲಿ ನೀಡಲು ನಿರ್ಧರಿಸಲಾಗಿದೆ. ಈ ಶಾಲೆಯ ಆಯ್ಕೆ ಸಮಿತಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ವಲಯದ ಐಜಿಪಿ, ಸೇರಿದಂತೆ ಪೊಲೀಸ್ ಅಧಿಕಾರಿಗಳು ಇರಲಿದ್ದು, ಅವರು ಮಕ್ಕಳನ್ನು ಆಯ್ಕೆ ಮಾಡಲಿದ್ದಾರೆ. ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾದ ವಸತಿ ನಿಲಯಗಳಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ಧೇಶ ಹೊಂದಲಾಗಿದೆ.