ದಾವಣಗೆರೆ:ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೊಗಳಿರುವ ಬಗ್ಗೆ ನನಗೇನೂ ಗೊತ್ತಿಲ್ಲ. 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚನೆ ಸಂಬಂಧ ಆಲೋಚನೆ ಮಾಡಿಲ್ಲ. ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯುತ್ತಾರೆ ಅಷ್ಟೇ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇವೇಗೌಡರ ಹೇಳಿಕೆಯ ಮರ್ಮವೇನೋ ಗೊತ್ತಿಲ್ಲ. ನೀವೇ ಹೇಳಬೇಕು. ಪಕ್ಷಕ್ಕಾಗಿ ತ್ಯಾಗ ಮಾಡಿರುವ ಸೋನಿಯಾ ಗಾಂಧಿ ಪವರ್ಫುಲ್ ನಾಯಕಿ. ದೇವೇಗೌಡರು ಹೊಗಳಿದ್ದರಲ್ಲಿ ಅಚ್ಚರಿ ಏನಿಲ್ಲ ಎಂದ ಅವರು, ಫಲಿತಾಂಶದ ಬಳಿಕ ಮತ್ತೆ ಜೆಡಿಎಸ್ ಜೊತೆ ಮೈತ್ರಿ ಕುರಿತು ಏನೂ ಪ್ರತಿಕ್ರಿಯೆ ನೀಡಲಿಲ್ಲ.
ಉಪ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾಕೆ ಬಂದಿಲ್ಲ. ನೆರೆ ಬಂದಾಗ ನಿರ್ಲಕ್ಷಿಸಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಉಪಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳು ಸೋಲಲಿದ್ದಾರೆ. ನೆರೆ ಬಂದಾಗ ಬಾರದೇ ಇರುವವರು ಈಗ ಬರುತ್ತಾರಾ, ಜನರು ಅವರನ್ನು ಬೆಂಬಲಿಸುತ್ತಾರಾ ಎಂದು ಪ್ರಶ್ನಿಸಿದರು.