ಹುಬ್ಬಳ್ಳಿ:ರಾಜ್ಯ ಸರ್ಕಾರ ಮತ್ತು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ನೂರಾರು ಕೋಟಿ ರೂಪಾಯಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 25ರಷ್ಟು ಕಮಿಷನ್ ದಂಧೆ ನಡೆದಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ ಎಂದು ಅನುಮತಿ ಪಡೆದ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಜಿ ರುದ್ರೇಶ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ವಿವಿಧ ಕಾಮಗಾರಿಗಳಿಗೆ 472 ಕೋಟಿ ರೂಪಾಯಿ ಟೆಂಡರ್ ಕರೆಯಲಾಗಿದೆ. ರೈತರ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಹೆಚ್ಟಿ ಲೈನ್ ಮತ್ತು ಎಲ್ಟಿ ಲೈನ್ ನಿರ್ಮಿಸುವುದು ಹಾಗೂ ಲಿಂಕ್ಲೈನ್ ಕಾಮಗಾರಿಗೆ 34 ಲಾಟ್ಗಳಲ್ಲಿ ಟೆಂಡರ್ ನೀಡಲಾಗಿದೆ. ಆದರೆ, ಲಂಚ ನೀಡುವವರಿಗೆ ಅನುಕೂಲ ಮಾಡಲು ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಟೆಂಡರ್ ರೂಪಿಸಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ಆರೋಪಿಸಿದರು.
ಹೆಸ್ಕಾಂ ಎಂಡಿ. ಡಿ. ಭಾರತಿ ಮತ್ತು ತಾಂತ್ರಿಕ ನಿರ್ದೇಶಕ ಶ್ರೀಕಾಂತ ಸಸಾಲೊಟ್ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಆಪ್ತ ಗುತ್ತಿಗೆದಾರರಿಂದ ಲಂಚ ಪಡೆದು ಕೋಟ್ಯಂತರ ರೂಪಾಯಿ ಕಾಮಗಾರಿ ಮಂಜೂರು ಮಾಡಲಾಗಿದೆ ಎಂದು ದೂರಲಾಗಿದೆ.