ಧಾರವಾಡ ಜಿಲ್ಲಾಡಳಿತದಿಂದ ಅನುಮತಿ ಪಾಸ್ ನೀಡುವಲ್ಲಿ ತಾರತಮ್ಯ ಆರೋಪ - Dharwad
ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್ನಲ್ಲಿ 500 ಜನ ಶಾಮಿಯಾನ ಸಪ್ಲಾಯರ್ಸ್ಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಅನುಮತಿ ಪಾಸ್ ನೀಡುವಲ್ಲಿ ಧಾರವಾಡ ಜಿಲ್ಲಾಡಳಿತ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಶಾಮಿಯಾನ್ ಸಪ್ಲಾಯರ್ಸ್ಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗೆ ಸಿದ್ದತೆ
ಹುಬ್ಬಳ್ಳಿ:ಧಾರವಾಡ ಜಿಲ್ಲಾಡಳಿತ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅನುಮತಿ ಪಾಸ್ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ನಾಳೆ ನಗರದ ಶ್ರೀನಿವಾಸ ಗಾರ್ಡನ್ನಲ್ಲಿ 500 ಜನ ಶಾಮಿಯಾನ ಸಪ್ಲಯರ್ಸ್ಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ. ಕೋವಿಡ್-19 ಸಂಕಷ್ಟದಲ್ಲಿರುವ 500 ಶಾಮಿಯಾನ ಸಪ್ಲಯರ್ಸ್ ಕಾರ್ಮಿಕರಿಗೆ ಒಂದೇ ಕಡೆ ಸೇರಿಸಿ, ನಾಳೆ ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್ನಲ್ಲಿ ಆಹಾರ ಸಾಮಗ್ರಿಗಳ ಕಿಟ್ಗಳನ್ನು ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಲಿದ್ದಾರೆ.
4 ಲಕ್ಷ ಮುಸ್ಲಿಂ ಸಮುದಾಯದ ಜನರನ್ನು ಪ್ರತಿನಿಧಿಸುವ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯ ನಿಯೋಗ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ, ಸೋಮವಾರ ರಂಜಾನ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನಗಳಲ್ಲಿ ಕೇವಲ ಐದು ಜನರಿಗೆ ಮಾತ್ರ ಈದ್-ಉಲ್-ಫಿತರ್ ನಮಾಜ್ ಮಾಡಲು ಅನುಮತಿಯನ್ನು ನೀಡಿ ಎಂದು ಲಿಖಿತವಾಗಿ ಮನವಿ ಮಾಡಿಕೊಂಡಿತ್ತು. ಈ ವಿಷಯ ನನ್ನ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಅನುಮತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ತಾಫ ಹುಸೇನ ಹಳ್ಳೂರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇವಲ 5 ಜನರಿಗೆ ಸೇರಲು ಅನುಮತಿ ಕೊಡದ ಜಿಲ್ಲಾಡಳಿತ ಈಗ 500 ಕ್ಕೂ ಹೆಚ್ಚು ಜನರನ್ನು ಸೇರಲು ಅನುಮತಿ ನೀಡಿದೆ. ಯಾವ ಮಾನದಂಡದ ಮೇಲೆ ಅನುಮತಿ ನೀಡಿದೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.