ಹುಬ್ಬಳ್ಳಿ :ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರದ ಮಧ್ಯಸ್ಥಿಕೆ ವಹಿಸಿ ಮುಂದಿನ ಹದಿನೈದು ದಿನಗಳಲ್ಲಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮತ್ತೆ ಉಗ್ರ ಹೋರಾಟದ ಹಾದಿ ತುಳಿಯಬೇಕಾಗುವುದು ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಸಿದ್ದಣ್ಣ ತೇಜಿ ಎಚ್ಚರಿಕೆ ನೀಡಿದರು.
ಮಹದಾಯಿ ವಿವಾದ: ಕೇಂದ್ರ ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹ.. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 40 ವರ್ಷಗಳಿಂದ ಮಹದಾಯಿ ಕಳಸಾ ಬಂಡೂರಿ ಯೋಜನೆಗಾಗಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಪ್ರಧಾನಮಂತ್ರಿಗಳು ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ನಂತರ ಟ್ರಿಬ್ಯುನಲ್ನಲ್ಲಿ 13 ಟಿಎಂಸಿ ನೀರು ಕೊಡಲು ಆದೇಶವಾಗಿತ್ತು. ಆದೇಶದ ನಂತರ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ನೋಟಿಫೀಕೇಶನ್ ಹೊರಡಿಸಿ ಮಹದಾಯಿ ಸಮಸ್ಯೆ ಬಗೆಹರಿಸಬಹುದಿತ್ತು. ಅಲ್ಲದೇ ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಗೋವಾ ಸಚಿವರು ಮಹದಾಯಿ ವಿಚಾರದಲ್ಲಿ ಇತ್ಯರ್ಥಗೊಳಿಸಿಕೊಳ್ಳಲು ಪತ್ರ ಬಂದಿದೆ ಎಂದು ಹುಬ್ಬಳ್ಳಿಯಲ್ಲಿ ಓದಿದ್ರು.
ಇಷ್ಟೆಲ್ಲಾ ಜನರನ್ನು ನಂಬಿಸಿದ ಬಿಜೆಪಿಯವರು ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೂ ಸಹಿತ ಮಹದಾಯಿ ವಿಚಾರವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವುದನ್ನು ಬಿಟ್ಟು ಅನ್ಯಾಯ ಮಾಡುತ್ತಿದ್ದಾರೆ. ಕಲಂ 261ರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಬಗೆಹರಿಸಬಹುದಿತ್ತು. ಅದನ್ನು ಬಿಟ್ಟು ಇದೀಗ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಬರುವುದಿಲ್ಲ ಎಂದು ತಿಳಿಸಿದೆ. ಇದು ಮತ್ತೆ ಕಳಸಾ ಬಂಡೂರಿ ಹೋರಾಟಗಾರರಿಗೆ ನೋವುಂಟು ಮಾಡಿದೆ ಎಂದರು.
ಕೂಡಲೇ ಸರ್ಕಾರ ಮುಂದಿನ 15 ದಿನಗಳಲ್ಲಿ ಕೇಂದ್ರದ ಮಧ್ಯಸ್ಥಿಕೆಯಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತೆ. ಅಂದ್ರೆ ಸರ್ಕಾರಿ ಕಚೇರಿಗಳಿಗೆ ಮಾತ್ರ ಬೀಗ ಹಾಕಿ ಉಗ್ರ ಹೋರಾಟ ಮಾಡಲಾಗುವುದು ಎಂದರು.