ಕರ್ನಾಟಕ

karnataka

ETV Bharat / state

450 ಎಲೆಕ್ಟ್ರಿಕ್​ ಬಸ್​ಗಳ ಸಂಚಾರಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿದ್ಧತೆ - ಈಟಿವಿ ಭಾರತ ಕನ್ನಡ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಎಲೆಕ್ಟ್ರಿಕ್​ ಬಸ್‌ಗಳ ಕಾರ್ಯಾಚರಣೆಗೆ ಯೋಜಿಸಲಾಗಿದೆ ಎಂದು ಎಂಡಿ ಭರತ್​ ಎಸ್​ ತಿಳಿಸಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

By ETV Bharat Karnataka Team

Published : Aug 25, 2023, 8:22 PM IST

ಹುಬ್ಬಳ್ಳಿ: ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 450 ಪರಿಸರಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಯೋಜಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್ ಹೇಳಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಸ್ತುತ 4,830 ಬಸ್‌ಗಳಿವೆ. 4,539 ಅನುಸೂಚಿಗಳ ಮೂಲಕ ಪ್ರತಿದಿನ ಸರಾಸರಿ 15 ಲಕ್ಷ ಕಿಲೋಮೀಟರ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಗೆ ಮೊದಲು ನಿತ್ಯ 17.48 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷಕ್ಕೆ ಹೆಚ್ಚಳವಾಗಿದೆ. ನಗರ ಸಾರಿಗೆ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಬಹಳಷ್ಟು ಏರಿಕೆಯಾಗಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ಕ್ರಮವಹಿಸಲಾಗುತ್ತಿದೆ. ಅದರ ಭಾಗವಾಗಿ ಒಟ್ಟು 450 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲು ತೀರ್ಮಾನಿಸಲಾಗಿದೆ. ಅವುಗಳಲ್ಲಿ 200 ಗ್ರಾಮಾಂತರ ಸಾರಿಗೆ ಬಸ್‌ಗಳು, 150 ನಗರ ಸಾರಿಗೆ ಮಾದರಿ ಹಾಗೂ 100 ಬಿಆರ್‌ಟಿಎಸ್ ಮಾದರಿಯ ಬಸ್​ಗಳೂ ಸೇರಿವೆ. ಗ್ರಾಮಾಂತರ ಹಾಗೂ ನಗರ ಸಾರಿಗೆ ಬಸ್‌ಗಳನ್ನು ಹು-ಧಾ ನಗರ ಸಾರಿಗೆ ವಿಭಾಗ, ಹುಬ್ಬಳ್ಳಿ ಗ್ರಾಮಾಂತರ, ಧಾರವಾಡ ಹಾಗೂ ಬೆಳಗಾವಿ ವಿಭಾಗಗಳಿಂದ ಕಾರ್ಯಾಚರಣೆ ಮಾಡಲಾಗುವುದು. ಬಿಆರ್‌ಟಿಎಸ್ ಮಾದರಿಯ ಬಸ್​ಗಳ ಕಾರ್ಯಾಚರಣೆ ಕುರಿತು ಟೆಂಡರ್ ಫಲಿತಾಂಶದ ಆಧಾರದ ಮೇಲೆ ಹೆಚ್‌ಡಿಬಿ‌ಆರ್‌ಟಿಎಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಿಸಿಸಿ ಮಾದರಿಯಲ್ಲಿ ಕಾರ್ಯಾಚರಣೆ:ಈ ಬಸ್‌ಗಳನ್ನು ಜಿ.ಸಿ.ಸಿ.(ಗ್ರಾಸ್ ಕಾಸ್ಟ್ ಕಾಂಟ್ರ್ಯಾಂಕ್ಟ್) ಮಾದರಿಯಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಬಸ್​ ಸಂಚಾರದ ಕಿ.ಮೀ. ಆಧಾರದ ಮೇಲೆ ಸಂಸ್ಥೆಯು ಕಂಪನಿಗೆ ಹಣ ಪಾವತಿಸಲಿದೆ.

ಸಂಸ್ಥೆಯ ವ್ಯಾಪ್ತಿಯ ಪ್ರಮುಖ ನಗರಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕುರಿತಂತೆ ಟೆಂಡರ್ ನಡೆಸಲು ಸರ್ಕಾರ ಅನುಮೋದನೆ ನೀಡಿದೆ. ಟೆಂಡರ್ ನಿಬಂಧನೆಗಳನ್ನು ಅಂತಿಮಗೊಳಿಸಿ ಶೀಘ್ರದಲ್ಲಿ ಟೆಂಡರ್ ಹೊರಡಿಸಲಾಗುವುದು. ನಂತರ ವಿವರಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ನಗರ ಸಾರಿಗೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ಬಸ್​ಗಳ ಕಾರ್ಯಾಚರಣೆ ಬಗ್ಗೆ ಅಗತ್ಯ ಮಾಹಿತಿ ಪಡೆಯಲು ಸಂಸ್ಥೆಯ ಅಧಿಕಾರಿಗಳ ತಂಡವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕ.ರಾ.ರ.ಸಾ.ನಿಗಮಕ್ಕೆ ನಿಯೋಜಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ: ಡಿಸಿಎಂ ಡಿ.ಕೆ.ಶಿವಕುಮಾರ್

ABOUT THE AUTHOR

...view details