ಹಾಸನ : ಅತೀವೇಗ ಮತ್ತು ಅಜಾಗರೂಕತೆಯಿಂದಾಗಿ ಜಿಲ್ಲೆಯಲ್ಲಿ ಎರಡು ಕಡೆ ಅಪಘಾತಗಳು ಸಂಭವಿಸಿ ಓರ್ವ ಸಾವಿಗೀಡಾಗಿದ್ದು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೇಲೂರು ಮತ್ತು ಹಳೇಬೀಡು ರಸ್ತೆಯ ನ್ಯಾಷನಲ್ ಸಾಮಿಲ್ ಮುಂಭಾಗ ನಿಂತಿದ್ದ ಆಟೋಗೆ ಅತಿವೇಗದಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಶೇಖರ್ ದಂಪತಿಗಳಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ಅಪಘಾತವೆಸಗಿದ ಕಾರು ಗೋಣಿ ಸೋಮನಹಳ್ಳಿಯ ಸೋಮಶೇಖರ್ ಎಂಬುವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಚಾಲಕನ ಅಜಾಗರೂಕತೆಯ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಹಾಸನದಲ್ಲಿ ಒಂದೇ ದಿನದಲ್ಲಿ ಎರಡು ಅಪಘಾತ ಅಪಘಾತದಲ್ಲಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕುಮಾರ್ ಎಂಬಾತನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಆತನನ್ನು ಕೂಡ ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಈ ಸಂಬಂಧ ಬೇಲೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಇನ್ನೊಂದೆಡೆ ರಾಷ್ಟ್ರೀಯ ಹೆದ್ದಾರಿ 75ರ ಉದಯಪುರ ಸಮೀಪ ಚಿಕ್ಕಮಗಳೂರಿನಿಂದ ಹಾಸನ ಮಾರ್ಗವಾಗಿ ಸೇಲಂ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ಅಜಾಗರೂಕತೆಯಿಂದ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಓರ್ವ ಸಾವಿಗೀಡಾಗಿದ್ದಾನೆ.
ಕಾರಿನಲ್ಲಿದ್ದ ಮೂರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿಯನ್ನು ಜಾಗರವಳ್ಳಿ ಗ್ರಾಮದ ಹರೀಶ್ ಎಂದು ಗುರುತಿಸಲಾಗಿದೆ. ಶಾಂತಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.