ಹಾವೇರಿ: ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಮಡಿದ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನವೀನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಅವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ನವೀನ್ ಸಾವು ಸಾಕಷ್ಟು ನೋವು ತಂದಿದೆ. ನವೀನ್ ಪೋಷಕರದ್ದು ಪ್ರಮುಖ ಬೇಡಿಕೆ ಮೃತದೇಹ ತರಬೇಕು ಎನ್ನುವುದಾಗಿದೆ. ಅದರಂತೆ ಸರ್ಕಾರ ಕಾರ್ಯ ಪ್ರವೃತ್ತವಾಗಿದ್ದು, ಆದಷ್ಟು ಬೇಗ ನವೀನ್ ಅವರ ಪಾರ್ಥಿವ ಶರೀರ ತರಲಿದ್ದೇವೆ ಎಂದು ಭರವಸೆ ನೀಡಿದರು.