ಕರ್ನಾಟಕ

karnataka

ಕಾರ್ಮಿಕ ಸಂಘಟನೆಗಳಿಂದ ಕಲಬುರಗಿಯಲ್ಲಿ ಬೃಹತ್​ ಪ್ರತಿಭಟನೆ

By

Published : Nov 26, 2020, 3:35 PM IST

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಕಲಬುರಗಿ ನಗರದಲ್ಲಿ ಬೃಹತ್​ ಪ್ರತಿಭಟನೆ ನಡೆಯಿತು.

Labor Union Mass protests at Kalburgi
ಕಲಬುರಗಿ ನಗರದಲ್ಲಿ ಬೃಹತ್​ ಪ್ರತಿಭಟನೆ ನಡೆಯಿತು

ಕಲಬುರಗಿ :ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರು, ಕೃಷಿಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕರು ಭಾಗವಹಿಸಿದ್ದರು. ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ನಗರದಲ್ಲಿ ಬೃಹತ್​ ಪ್ರತಿಭಟನೆ ನಡೆಯಿತು

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು, ಕಾರ್ಮಿಕ ಮತ್ತು ರೈತ ವಿರೋಧಿ ಕಾನೂನು ಹಿಂತೆಗೆದುಕೊಳ್ಳಬೇಕು. ಉದ್ಯೋಗ ಖಾತರಿ ಯೋಜನೆಯಡಿ 200 ದಿನಗಳ ಕೆಲಸ ನೀಡಬೇಕು. ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ತೊಗರಿಗೆ ವೈಜ್ಞಾನಿಕ ಬೆಂಬಲ ನಿಗದಿ ಮಾಡುವುದು ಸೇರಿದಂತೆ ಕಾರ್ಮಿಕರು ಮತ್ತು ಶ್ರಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ‌ ಸಲ್ಲಿಸಿದರು.

ಸಾರಿಗೆ ನೌಕರರಿಂದ ಧರಣಿ ಸತ್ಯಾಗ್ರಹ :ರಾಷ್ಟ್ರವ್ಯಾಪಿ ಕರೆ ನೀಡಿರುವ ಕಾರ್ಮಿಕರ ಮುಷ್ಕರ ಬೆಂಬಲಿಸಿ, ಸಾರಿಗೆ ನೌಕರರು ಕಲಬುರಗಿ ಸಾರಿಗೆ ಭವನದ ಎದುರು ಸಾಂಕೇತಿಕ ಧರಣಿ ನಡೆಸಿದರು.

ಸಾರಿಗೆ ನಿಗಮ ಖರೀದಿಸುವ ಸಗಟು ಡೀಸೆಲ್ ಮೇಲಿನ ಸುಂಕ ಕಡಿಮೆ ಮಾಡಬೇಕು. ಸಾರಿಗೆ ನಿಗಮದ ಸಿಬ್ಬಂದಿ ಅನುಪಾತವನ್ನು ಹೆಚ್ಚಿಸಿ, ಕಾರ್ಮಿಕರ ಮೇಲಿನ ಕೆಲಸದ ಹೊರೆಯನ್ನು ಕಡಿಮೆ ಮಾಡಬೇಕು. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಶಾಶ್ವತ ಮೋಟಾರ್ ವಾಹನ ತೆರಿಗೆ ವಿನಾಯಿತಿ ನೀಡುವುದು ಸೇರಿದಂತೆ, ಸಾರಿಗೆ ನೌಕರರು ಮತ್ತು ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ABOUT THE AUTHOR

...view details