ಕಲಬುರಗಿ:ಸರ್ಕಾರದ ನಡೆ ಮತ್ತು ನುಡಿ ನೋಡಿದರೆ ಕಳೆದ ವರ್ಷದ ಕೊರೊನಾದಿಂದಲೂ ಸರ್ಕಾರ ಪಾಠ ಕಲಿತಂತೆ ಕಾಣುತ್ತಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಕೊರೊನಾ ಎರಡನೇ ಅಲೆಯ ಆತಂಕ ಹೆಚ್ಚಾಗಿದೆ. ರೋಗವನ್ನು ಹತೋಟಿಗೆ ತರಬೇಕಾದ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಇದನ್ನೆಲ್ಲ ಗಮನಿಸಿದರೆ ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಪಾಠ ಕಲಿತಿಲ್ಲ ಎಂದೆನಿಸುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಜಿಲ್ಲೆಯಲ್ಲಿ ಎರಡು ಸಾವಿರ ಜನರಿಗೆ ಸೋಂಕು ತಗುಲಿದೆ, 24 ಜನ ಸಾವಿಗೀಡಾಗಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ಸೋಂಕಿತರಿಗೆ ಚಿಕಿತ್ಸೆ ಕೊಡಲು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲ. ರೆಮಿಡಿಸಿವರ್ ಇಂಜೆಕ್ಷನ್, ಬೆಡ್ಗಳ ಕೊರತೆ ಇದೆ. ಹಾಗಾದ್ರೆ ಈ ಸರ್ಕಾರ ಮಾಡುವುದೇನು ಎಂದು ಪ್ರಶ್ನಿಸಿದರು.