ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗದ ಖ್ಯಾತ ಸಾಹಿತಿ, ಹಾರೈಕೆಯ ಕವಿ ಎಂದೇ ಪ್ರಸಿದ್ಧಿ ಪಡೆದಂತಹ ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಸಂಖ್ಯಾತ ವಿದ್ಯಾರ್ಥಿಗಳ ಬಾಳಿನ ಜ್ಯೋತಿಯಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಹಲವಾರು ಕಾವ್ಯ, ಲೇಖನಗಳು, ವಿಶೇಷವಾಗಿ ದಾಸ ಸಾಹಿತ್ಯದಲ್ಲಿ ಸಾಹಿತ್ಯ ಕೃಷಿಯನ್ನು ಮಾಡಿ ಸಾಹಿತ್ಯ ಲೋಕಕ್ಕೆ ವಿಶೇಷವಾದ ಕೊಡುಗೆ ನೀಡಿದ್ದಾರೆ. ಕಲಬುರಗಿಯ ನೂತನ ವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು, ಪ್ರಾಂಶುಪಾಲರಾಗಿ ಕುಷ್ಟಗಿ ಅವರ ಸೇವೆ ಸ್ಮರಣೀಯವಾಗಿದೆ.
1995ರಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ ಪಠ್ಯಕ್ರಮ ಪರಿಸ್ಕರಣೆಗೊಂಡು 10ನೇ ತರಗತಿಯ ಪ್ರಥಮ ಭಾಷೆಯಾದ ಕನ್ನಡದ ಪದ್ಯ ಭಾಗದಲ್ಲಿ ಮೊದಲ ಪದ್ಯವೇ ಹಾರೈಕೆ ಕವಿತೆ ಮೂಲಕ ಕರುನಾಡಿನಾದ್ಯಂತ ಮನೆಮಾತಾಗಿದ್ದರು. ಮಾಜಿ ಮುಖ್ಯಮಂತ್ರಿ ದಿ. ಎನ್.ಧರಂಸಿಂಗ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರೊ. ಕುಷ್ಟಗಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.
ಸಿಎಂ ಸೇರಿ ಹಲವರಿಂದ ಸಂತಾಪ:
ಹಿರಿಯ ಸಾಹಿತಿ, ಚಿಂತಕ ಪ್ರೊ. ವಸಂತ ಕುಷ್ಟಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಪ್ರೊ. ಕುಷ್ಟಗಿ ಅವರು ಉತ್ತಮ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳ ಜ್ಞಾನ ದಾಹ ನೀಗಿಸಿದರು. ಸಾಹಿತ್ಯ ಕ್ಷೇತ್ರಕ್ಕೂ ಅವರ ಕೊಡುಗೆ ಗಣನೀಯವಾದುದು. ಕಲ್ಯಾಣ ಕರ್ನಾಟಕ ಭಾಗದ ಸಾಹಿತ್ಯ, ಇತಿಹಾಸಗಳ ಕುರಿತು ಅಪಾರ ಜ್ಞಾನ ಹೊಂದಿದ್ದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಪ್ರೊ. ವಸಂತ ಕುಷ್ಟಗಿ ಅವರ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ, ಕಲ್ಯಾಣ ಕರ್ನಾಟಕದ, ಕರುನಾಡಿನ, ಮಾತೃಭಾಷೆಯ ಕರುಳ ಬಳ್ಳಿ, ಪ್ರಾಧ್ಯಾಪಕರು, ಲೇಖಕರು, ಸಾಹಿತಿಗಳು, ಭಾಷಾ ವಿದ್ವಾoಸರು, ಸಾಹಿತ್ಯ ಲೋಕದ ಮೇರು ಕಳಸ ಆಗಿದ್ದ ಪ್ರೊ. ವಸಂತ ಕುಷ್ಟಗಿ ಅವರ ನಿಧನಕ್ಕೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ತೀವ್ರ ಸಂತಾಪ ಸೂಚಿಸಿದ್ದಾರೆ.