ಕಲಬುರಗಿ:ಪ್ರಸಕ್ತ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು: ಪಿ.ರವಿಕುಮಾರ್ ಸೂಚನೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲಿಸಿ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಹೆಚ್ಚಿನ ಮಳೆಯಾಗಿದ್ದರಿಂದ ಅಂತರ್ಜಲ ವೃದ್ಧಿಯಾಗಿದ್ದು, ನೀರಿನ ಹಾಹಾಕಾರ ಅಷ್ಟೊಂದು ಆಗುವುದಿಲ್ಲ ಎಂದು ಅಂದಾಜಿಸಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ನೀರಿನ ಸಮಸ್ಯೆ ಕಾಣಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸಿಕೊಂಡು ಪರಿಸ್ಥಿತಿಗೆ ತಕ್ಕಂತೆ ಕಾರ್ಯನಿರ್ವಹಿಸಬೇಕು. ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಅಫಜಲಪುರ ತಾಲೂಕಿನ ಅಳ್ಳಗಿಯಲ್ಲಿ ಖಾಯಂ ವಿದ್ಯುತ್ ಸಂಪರ್ಕವಿಲ್ಲದ ಕಾರಣ ಯೋಜನೆ ಅನಷ್ಠಾನವಾಗಿಲ್ಲ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಸಭೆಯ ಗಮನಕ್ಕೆ ತಂದಾಗ, ಕೂಡಲೇ ವಿದ್ಯುತ್ ವ್ಯವಸ್ಥೆ ಕಲ್ಪಿಸಿ ಯೋಜನೆ ಕಾರ್ಯರೂಪಕ್ಕೆ ತರುವಂತೆ ಜೆಸ್ಕಾಂ ಎಂ.ಡಿ.ರಾಹುಲ್ ಪಾಂಡ್ವೆಗೆ ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಮೇವಿನ ಕೊರತೆ ಇಲ್ಲ:ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕಾಣಬಹುದಾದ 156 ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದೆ. 2020-21ನೇ ಸಾಲಿನಲ್ಲಿ ವಾಡಿಕೆಗಿಂತ ಶೇ.39ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಅಂತರ್ಜಲಮಟ್ಟ ವೃದ್ಧಿಯಾಗಿದೆ. 50 ವಾರಕ್ಕಾಗುವಷ್ಟು ಮೇವು ದಾಸ್ತಾನು ಜಿಲ್ಲೆಯಲ್ಲಿದ್ದು, ಮೇವಿನ ಕೊರತೆಯಿಲ್ಲ ಎಂದರು.
ಪ್ರತಿ ರೈತನ ಸರ್ವೇವಾರು ಪ್ಲಾಟ್ಗಳ ತಂತ್ರಾಂಶ ದಾಖಲೀಕರಣಕ್ಕೆ “ಫ್ರೂಟ್ಸ್” ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಇದು ರೈತನ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸಹಾಯವಾಗಲಿದೆ. ಜಿಲ್ಲೆಯಲ್ಲಿ ಗುರುತಿಸಿರುವ 6,80,227 ಪ್ಲಾಟ್ಗಳ ಪೈಕಿ 5,2,356 ಡಾಟಾ ಇವರೆಗೆ ದಾಖಲಿಸಿದ್ದು, ಉಳಿದ ಪ್ಲಾಟ್ಗಳ ದಾಖಲೀಕರಣ 10 ದಿನದೊಳಗೆ ಪೂರ್ಣಗೊಳಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ರತೇಂದ್ರನಾಥ ಸುಗೂರು ಅವರಿಗೆ ಮುಖ್ಯ ಕಾರ್ಯದರ್ಶಿ ಸೂಚಿಸಿದರು.
ಪಿಎಂ.ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಡಿ ಆನ್ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಿ ಸಾಲ ಮಂಜೂರಾತಿಗೆ ಕ್ರಮ ವಹಿಸಬೇಕು. ಇ - ಜನ್ಮ ತಂತ್ರಾಂಶದಲ್ಲಿ ಬಾಕಿಯಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡುವುದಲ್ಲದೇ, ನಿಧನ ಹೊಂದಿದವರ ಆಧಾರ ಕಾರ್ಡ್ ಅಪ್ಲೋಡ್ ಮಾಡಿದಲ್ಲಿ ಇದರಲ್ಲಿ ಕೆಲವರ ಖಾತೆಗೆ ಅನಗತ್ಯವಾಗಿ ಸರ್ಕಾರದಿಂದ ಹೋಗುವ ಪಿಂಚಣಿ ಹಣ ಉಳಿತಾಯ ಮಾಡಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಸಿಂಧುತ್ವ ಪ್ರಮಾಣ ಪತ್ರ ನೀಡಲು ಇಂದಿನವರೆಗೆ ಜಿಲ್ಲೆಯಲ್ಲಿ 371 ಅರ್ಜಿ ಬಾಕಿಯಿದ್ದು, ಇದು ಸಹ ಕಾಲಾವಧಿಯಲ್ಲಿಯೇ ವಿಲೇವಾರಿ ಮಾಡುವಂತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಅನುದಾನ ಕೊರತೆಯಾಗಲ್ಲ:
ಕಳೆದ ವರ್ಷ ಕೋವಿಡ್ ಸೋಂಕು ಕಾಡಿದ್ದರಿಂದ ಅನುದಾನದ ಸಮಸ್ಯೆಯಾಗಿದ್ದು, 2021-22ನೇ ಸಾಲಿನಲ್ಲಿ ಯಾವುದೇ ಅನುದಾನದ ಕೊರತೆಯಾಗುವುದಿಲ್ಲ. 2020-22ನೇ ಸಾಲಿಗೆ ಸಂಬಂಧಿಸಿದಂತೆ ಎಲ್ಲಾ ಕ್ರಿಯಾ ಯೋಜನೆಗಲನ್ನು ಬೇಗ ಸಿದ್ಧಪಡಿಸಿ, ಮಂಜೂರಾತಿಗೆ ಕಳುಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.