ಕೊಡಗು: ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಆದರೆ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗ್ರಾಮಸ್ಥರಿಗೆ ಜಲ ಸಂಕಷ್ಟ ಎದುರಾಗಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಪಯಸ್ವಿನಿ ನದಿ ತುಂಬಿ ಹರಿದು ಸಂಪಾಜೆ ಸಮೀಪದ ಕಲ್ಲುಗುಂಡಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅಕ್ಕಪಕ್ಕದ ಅಂಗಡಿ, ಮುಂಗಟ್ಟು, ಮನೆಗಳಿಗೂ ನೀರು ನುಗ್ಗಿದೆ. ವರ್ತಕರಿಗೆ ಅಪಾರ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕಿಂಡಿ ಅಣೆಕಟ್ಟೆಯಿಂದ ಅಪಾಯ: ಇದೇ ವ್ಯಾಪ್ತಿಯ ಕೊಯನಾಡಿನಲ್ಲೂ ಮಳೆಯಿಂದ ಪ್ರವಾಹ ಉಂಟಾಗಿದೆ. ಗ್ರಾಮಸ್ಥರ ವಿರೋಧದ ನಡುವೆಯೂ ಇಲ್ಲಿ ನಿರ್ಮಾಣಗೊಂಡಿರುವ ಕಿಂಡಿ ಅಣೆಕಟ್ಟೆಯಲ್ಲಿ ಮರದ ದಿಮ್ಮಿಗಳು ಕೊಚ್ಚಿ ಬಂದು ನಿಂತ ಪರಿಣಾಮ ಅಪಾಯದ ಮಟ್ಟ ಮೀರಿ ಹರಿದ ನದಿಯ ನೀರು ಸುತ್ತಮುತ್ತಲ ಮನೆಗಳನ್ನು ಆವರಿಸಿದೆ. ಪಕ್ಕದಲ್ಲೇ ಇರುವ ನಿವಾಸಿಗಳು ರಾತ್ರೋರಾತ್ರಿ ಮನೆ ಖಾಲಿ ಮಾಡಿದರು. ಹಲವು ಕುಟುಂಬಗಳನ್ನು ಕೊಯನಾಡಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಶಾಸಕರ ಭೇಟಿ:ಪ್ರವಾಹ ಪೀಡಿತ ಕೊಯನಾಡಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದರು. ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಳಜಿ ಕೇಂದ್ರದಲ್ಲಿರುವ ಕುಟುಂಬಗಳಿಗೆ ಧೈರ್ಯ ತುಂಬಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಕೂಡ ಕೊಯನಾಡು ಹಾಗೂ ಸಂಪಾಜೆ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿದರು. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಯನಾಡು ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.