ಕೊಪ್ಪಳ: ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗಿದೆ. ಇದರಿಂದಾಗಿ ಕಾಂಗ್ರೆಸ್ ಆತಂಕಗೊಂಡು ವೋಟ್ ಬ್ಯಾಂಕ್ ಸಲುವಾಗಿ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಸೇರಿದಂತೆ ಕಾಂಗ್ರೆಸ್ ಪಕ್ಷದ ಶಾಸಕರ ಮೇಲೆ, ಹಿಂದು ಕಾರ್ಯಕರ್ತರ ಮೇಲೆ ಹಲ್ಲೆಗಳಾಗಿವೆ. ಆದರೂ ಸಹ ಕಾಂಗ್ರೆಸ್ ಪಕ್ಷ ಈ ಸಂಘಟನೆಗಳನ್ನು ಬೆಂಬಲಿಸುತ್ತಿದೆ. ಮಂಗಳೂರಿನಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರಣ. ಅದನ್ನು ಮರೆಮಾಚಲು ಕಾಂಗ್ರೆಸ್ ಪೊಲೀಸರ ಮೇಲೆ ಗೂಬೆ ಕೂರಿಸುತ್ತಿದೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಈ ಹಿಂದೆ ಬಂದ ನೆರೆಯಿಂದ ಸಂಕಷ್ಟ ಅನುಭವಿಸಿದೆ. ಸದನದಲ್ಲಿ ಇಂತಹ ಗಂಭೀರ ವಿಷಯಗಳನ್ನು ಚರ್ಚೆ ಮಾಡಲು ಬಿಡದೆ ಕಾಂಗ್ರೆಸ್ ನಿನ್ನೆ ಸಭಾತ್ಯಾಗ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.