ಕನಕಗಿರಿ( ಕೊಪ್ಪಳ): ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ದಡೇಸೂಗೂರು ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹಾಡಿ ಹೊಗಳಿದ್ದಾರೆ.
ಕನಕಗಿರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಬ್ಬೊಬ್ಬರ ಕಾಲ್ಗುಣ, ಅವರವರ ಯೋಗಾಯೋಗ, ಅದೃಷ್ಟದಂತೆ ರಾಜಕಾರಣ ಮಾಡುತ್ತಾರೆ. ಬಿ.ವೈ.ವಿಜಯೇಂದ್ರ ಅವರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಎಲ್ಲರನ್ನೂ ಸಮಾನವಾಗಿ ಪ್ರೀತಿಯಿಂದ ಕಾಣುವ ಮೂಲಕ ಸಂಘಟನೆ ಮಾಡುತ್ತಾರೆ. ಅವರ ರಾಜಕಾರಣದ ನೀತಿಯಿಂದ ಈಗಾಗಲೇ ನಡೆದಿರುವ ಉಪಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಮಸ್ಕಿಯಲ್ಲೂ ಸಹ ಈಗ ಅವರಿಗೆ ಉಸ್ತುವಾರಿ ನೀಡಲಾಗಿದೆ. ಅಲ್ಲಿಯೂ ಸಹ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತಾರೆ ಎಂದು ಹೇಳಿದರು.