ಮೈಸೂರು :ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮೂರು ಪಕ್ಷಗಳು ಗೆಲ್ಲಲು ಅಬ್ಬರದ ಪ್ರಚಾರ ಹಾಗೂ ಮತದಾರರನ್ನ ಓಲೈಕೆ ಮಾಡಲು ಹಲವಾರು ಪ್ರಯತ್ನಗಳನ್ನ ನಡೆಸಿವೆ. ಈ ನಡುವೆ ಮೂರು ಪಕ್ಷದ ರಾಜ್ಯಮಟ್ಟದ ನಾಯಕರುಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ದಕ್ಷಿಣ ಪದವೀಧರ ಕ್ಷೇತ್ರ ರಂಗೇರಿದೆ.
ಜೂನ್ 13ರಂದು ನಡೆಯಲಿರುವ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಯನ್ನೊಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಪಕ್ಷದ ಪ್ರಮುಖ ರಾಜ್ಯಮಟ್ಟದ ನಾಯಕರುಗಳು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಣ ರಂಗೇರಿದೆ.
ಚುನಾವಣಾ ಕಣದಲ್ಲಿ ಪ್ರಮುಖವಾಗಿ ಬಿಜೆಪಿಯಿಂದ ಮೈ. ವಿ ರವಿಶಂಕರ್, ಕಾಂಗ್ರೆಸ್ನಿಂದ ಮಧು ಮಾದೇಗೌಡ, ಜೆಡಿಎಸ್ನಿಂದ ಹೆಚ್ ಕೆ ರಾಮು, ರೈತ ಸಂಘಗಳ ಒಕ್ಕೂಟದಿಂದ ಪ್ರಸನ್ನ ಎನ್. ಗೌಡ ಸ್ಪರ್ಧೆ ಮಾಡಿದ್ದು, ಪ್ರಮುಖವಾಗಿ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಪ್ರಚಾರದಲ್ಲಿ ಘಟಾನುಘಟಿ ನಾಯಕರು..ಕಳೆದ ಬಾರಿ ಅಲ್ಪ ಮತಗಳಿಂದ ಸೋತಿದ್ದ ಬಿಜೆಪಿ ಅಭ್ಯರ್ಥಿ ಮೈ. ವಿ ರವಿಶಂಕರ್ ಪರ ಈಗಾಗಲೇ ಬಿಜೆಪಿಯ ಪ್ರಮುಖ ನಾಯಕರುಗಳು ಪ್ರಚಾರ ಕೈಗೊಂಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ ಸೋಮಶೇಖರ್ ಕಳೆದ 15 ದಿನಗಳಿಂದಲೂ ಗ್ರಾಮಾಂತರ ಪ್ರದೇಶದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸೇರಿದಂತೆ ಪ್ರಮುಖ ಸಚಿವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದು, ಇದೇ ತಿಂಗಳ 8ನೇ ತಾರೀಖಿನಂದು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ ಮಂಡ್ಯ ಜಿಲ್ಲೆಯವರಾಗಿದ್ದು, ಅವರ ತಂದೆ ದಿವಂಗತ ಡಿ. ಮಾದೇಗೌಡ ಅವರ ನಾಮಬಲ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರುಗಳ ಪ್ರಚಾರದಿಂದ ಗೆಲುವಿನ ನಿರೀಕ್ಷೆಯಲ್ಲಿದ್ದು, ಇಂದಿನಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನಿಂದ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಆರಂಭಿಸಿದ್ದಾರೆ. ಇವರಿಗೆ ಆರ್ ಧ್ರುವನಾರಾಯಣ್, ಮಾಜಿ ಸಚಿವ ಹೆಚ್ ಸಿ ಮಹಾದೇವಪ್ಪ ಸಾಥ್ ನೀಡಲಿದ್ದಾರೆ.