ಮೈಸೂರು : "ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ತಾರತಮ್ಯವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ಹೋರಾಟ ಮಾಡಲು ಕಾರ್ಯಕ್ರಮ ರೂಪಿಸುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, "ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟ್ಟೆ ಕೇಳಿಲ್ಲ. ನೀವು ಯಾವ ರೀತಿ ಅಕ್ಕಿ ಕೊಡುತ್ತಿದ್ದಿರೋ ಅದೇ ರೀತಿ ಕೊಡಿ. ಜೂನ್ ಒಂದರಿಂದ ರಾಜ್ಯದಲ್ಲಿ ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡುತ್ತೇವೆಂದು ತೀರ್ಮಾನ ಮಾಡಿದ್ದೇವೆ. ಆದರೆ, ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಹೇಳಿದೆ. ಈಗಾಗಲೇ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೆಲಂಗಾಣ, ಛತ್ತಿಸ್ಗಢ ಮುಂತಾದ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರದ ತಾರತಮ್ಯವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ನಮಗೆ ಕೊಡಬೇಕಾಗುತ್ತದೆ ಎಂಬ ಕಾರಣದಿಂದ ಬೇರೆ ರಾಜ್ಯಗಳಿಗೂ ಕೊಡಬೇಕಾದ ಅಕ್ಕಿಯ ಸರಬರಾಜನ್ನೂ ಸಹ ಕೇಂದ್ರ ಸರ್ಕಾರ ಹಿಂಪಡೆದಿದೆ" ಎಂದರು.
"ಬಿತ್ತನೆ ಬೀಜ ಹಂಚಿಕೆ ಮತ್ತು ರಸಗೊಬ್ಬರ ಬಗ್ಗೆ ಪಾರದರ್ಶಕತೆ ಇರಬೇಕು. ಅದಕ್ಕೊಂದು ನಿಯಮ ಇದೆ. ಹೇಗೆ, ಏನು, ಎಷ್ಟು ಕೆಜಿ ಕೊಡಬೇಕು ಎಂದು ತಿಳಿಸಲಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಓಪನ್ ಮಾರ್ಕೆಟ್ನಲ್ಲಿ ಖರೀದಿ ಮಾಡಲು ಸಾಧ್ಯವಿಲ್ಲ. ನ್ಯಾಯಬದ್ಧವಾಗಿರುವ ಕೆಲವು ಸಂಸ್ಥೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೆಲವು ಸಂಸ್ಥೆಗಳಿದ್ದು, ಅದರ ಪ್ರಕಾರವೇ ನಾವು ಖರೀದಿ ಮಾಡಬೇಕು" ಎಂದು ಡಿಕೆಶಿ ಹೇಳಿದರು.